ರಾಜ್ಯ

ತಮಿಳು ನಾಡಿಗೆ ಕಾವೇರಿ ನೀರು ಬಿಡುಗಡೆ: ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಸಭೆ, 107 ಅಡಿಗೆ ಕುಸಿದ ಕೆಆರ್​ಎಸ್​ ನೀರಿನ ಮಟ್ಟ

Sumana Upadhyaya

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಆಡಳಿತವಿರುವ ಸಂದರ್ಭದಲ್ಲಿ ಕಾವೇರಿ ವಿವಾದ ಮತ್ತೆ ಭುಗಿಲೆದ್ದಿದೆ. ಈ ವರ್ಷ ಮಳೆಯ ಅಭಾವದ ಮಧ್ಯೆ ತಮಿಳು ನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಮತ್ತು ರೈತ ಸಂಘಗಳು ಕೂಡ ವಿರೋಧ ವ್ಯಕ್ತಪಡಿಸುತ್ತಿವೆ.

ಕೆಆರ್‌ಎಸ್, ಕಬಿನಿ, ಹೇಮಾವತಿ ಜಲಾಶಯಗಳ ಮೇಲ್ಬಾಗದ ಜಲಾಯನ ಪ್ರದೇಶಗಳಲ್ಲಿ ವಾಡಿಕೆಯಷ್ಟು ಮಳೆಯಾಗದೆ ಡ್ಯಾಂಗಳೇ ಭರ್ತಿ ಆಗಿಲ್ಲ. ಆದರೂ ಕೂಡ ತಮಿಳುನಾಡಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ. ಇದರಿಂದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ. 

ಇಂದು ಮಂಡ್ಯದಲ್ಲಿ ಬಿಜೆಪಿ ನಾಯಕರ ಸಭೆ: ತಮಿಳು ನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಚರ್ಚಿಸಲು ಇಂದು ಬೆಳಗ್ಗೆ 10.30 ಕ್ಕೆ ಮಂಡ್ಯದಲ್ಲಿ ವಿಪಕ್ಷ ಬಿಜೆಪಿ ಸಭೆ ಕರೆದಿದೆ. ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಅಸ್ತ್ರ ಪ್ರಯೋಗಿಸಲು ಬಿಜೆಪಿ ಸಭೆ ಸೇರುತ್ತಿದೆ. ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ ಮತ್ತು ಮೈಸೂರು ಐದು ಜಿಲ್ಲೆಗಳ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಮಂಡ್ಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಸಭೆ ಸೇರಿ ಚರ್ಚಿಸಲಿದ್ದಾರೆ. ಕಾವೇರಿ ವಿಚಾರದಲ್ಲಿ ಮುಂದಿನ ಹೋರಾಟ ರೂಪಿಸುವ ವಿಚಾರವಾಗಿ ಸಭೆ ನಡೆಯಲಿದೆ.

107 ಅಡಿಗೆ ಕುಸಿದ ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುತ್ತಿದೆ. ಕೆಆರ್​ಎಸ್​​ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ. ಸದ್ಯ ಈಗ 107 ಅಡಿಗೆ ಕುಸಿದಿದೆ. 

SCROLL FOR NEXT