ಬೆಂಗಳೂರಿನ ಸಿಸಿಬಿ ಕಚೇರಿ ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರಗತಿಪರ ಸಾಹಿತಿಗಳಿಗೆ ಬೆದರಿಕೆ: ಸಿಸಿಬಿಗೆ ಪ್ರಕರಣಗಳ ವರ್ಗಾವಣೆ

ಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ದೂರುಗಳ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ.

ಬೆಂಗಳೂರು: ಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ದೂರುಗಳ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ. ಪ್ರಕರಣದ ಮೇಲ್ವಿಚಾರಣೆ ಮತ್ತು ತನಿಖೆಗೆ ಎಸಿಪಿ ಶ್ರೇಣಿಯ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲು ನಿರ್ಧರಿಸಲಾಗಿದೆ.

ಪ್ರಗತಿಪರ ಸಾಹಿತಿಗಳ ನಿಯೋಗ ಆ.23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕಳವಳ ವ್ಯಕ್ತಪಡಿಸಿತ್ತು. ಈ ಸಂಬಂಧ ಡಿಜಿಪಿ ಮತ್ತು ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಮತ್ತು ಸಂಬಂಧಿಸಿದ ಡಿಸಿಪಿ ಅವರು  ಪ್ರತಿದಿನವೂ ಪ್ರಕರಣಗಳನ್ನು ಪರಿಶೀಲಿಸುವಂತೆ ನಿರ್ದೇಶನಗಳನ್ನು ನೀಡಲಾಗಿದೆ. ಹಲವು ಬರಹಗಾರರಿಗೆ ಬೆದರಿಕೆ ಪತ್ರಗಳು ಬಂದಿದ್ದು, ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ.

ಒಂದು ವರ್ಷದಿಂದ ಸಾಹಿತಿಗಳಿಗೆ ದೂರವಾಣಿ ಕರೆ ಮತ್ತು ಪತ್ರಗಳ ಮೂಲಕ ಬೆದರಿಕೆಗಳು ಬರುತ್ತಿವೆ ಎಂದು ಖ್ಯಾತ ಲೇಖಕ ಕೆ.ಮರುಳಸಿದ್ದಪ್ಪ ತಿಳಿಸಿದ್ದಾರೆ. ಈ ಬೆಳವಣಿಗೆ ಆತಂಕ ಮೂಡಿಸಿದ್ದು, ಲೇಖಕರು ಭಯಭೀತರಾಗಿ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 

ಖ್ಯಾತ ಪ್ರಗತಿಪರ ಸಾಹಿತಿಗಳಾದ ಕುಂ.ವೀರಭದ್ರಪ್ಪ, ವಸುಂಧರಾ ಭೂಪತಿ ಮತ್ತು ಬಂಜಗೆರೆ ಜಯಪ್ರಕಾಶ್ ಅವರಿಗೆ ಹೆಚ್ಚಿನ ಸಂಖ್ಯೆಯ ಬೆದರಿಕೆಗಳು ಬಂದಿವೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೆ,  ಗೌರಿ ಲಂಕೇಶ್ ಮತ್ತು ಎಂ.ಎಂ.ಕಲಬುರ್ಗಿ ಅವರ ಗತಿಯನ್ನೇ ಎದುರಿಸಬೇಕಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. 

ಇಲ್ಲಿಯವರೆಗೆ ಲೇಖಕರಿಗೆ ಸುಮಾರು 15 ಬೆದರಿಕೆ ಪತ್ರಗಳು ಬಂದಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರು ಪತ್ರಗಳನ್ನು ಬರೆಯಲಾಗಿದೆ.ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಾಹಿತಿಗಳ ನಿಯೋಗಕ್ಕೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT