ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40 ಪರ್ಸೆಂಟ್ಕಮಿಷನ್ ಆರೋಪದ ಬಗ್ಗೆ ತನಿಖೆಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿದ್ದ ರಾಜ್ಯ ಸರ್ಕಾರ, ಈಗ ಕೇಸರಿ ಪಕ್ಷದ ವಿರುದ್ಧ ಮತ್ತೊಂದು ತನಿಖಾಸ್ತ್ರ ಬಳಸಿದೆ.
ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ಬಗ್ಗೆ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ಇದನ್ನು ಓದಿ: ಬಿಜೆಪಿ ಸರ್ಕಾರ ಅವಧಿಯ ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿರ್ವಹಣೆ, ತಡೆಗಟ್ಟಲು ಔಷಧ, ಉಪಕರಣಗಳು ಹಾಗೂ ಸಾಮಾಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಕುರಿತು ತನಿಖೆಗೆ ನ್ಯಾ. ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದ್ದು, 3 ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.
2021ರ ಜುಲೈ-ಆಗಸ್ಟ್ ನಲ್ಲಿ ನಡೆದ ‘ಸಾರ್ವಜನಿಕ ಲೆಕ್ಕಪತ್ರ ಸಮಿತಿ’ ನೀಡಿರುವ ವರದಿಯಲ್ಲಿನ ಗಂಭೀರ ಆರೋಪಗಳ ಕುರಿತು ತನಿಖಾ ಆಯೋಗ ರಚನೆ ಮಾಡಲಾಗಿದೆ. ಈ ಆಯೋಗಕ್ಕೆ ಸಂಬಂಧಪಟ್ಟಂತೆ ಆಯಾ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ ತನಿಖೆಗಾಗಿ ಅಪೇಕ್ಷಿಸುವ ಎಲ್ಲ ಕಡತಗಳು/ದಾಖಲಾತಿಗಳು/ಇತ್ಯಾದಿಗಳನ್ನು ಒದಗಿಸತಕ್ಕದ್ದು ಎಂದು ಆದೇಶದಲ್ಲಿ ಹೇಳಲಾಗಿದೆ.