ರಾಜ್ಯ

ಬಿಎಂಟಿಸಿ ಬಸ್- ಕಾರು ನಡುವೆ ಡಿಕ್ಕಿ, ಸಂಪೂರ್ಣ ಸುಟ್ಟು ಭಸ್ಮವಾದ ಕಾರು!

Nagaraja AB

ಬೆಂಗಳೂರು: ಬಿಎಂಟಿಸಿ ಬಸ್ ಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. 

ಸೋಮವಾರ ಬೆಳಗ್ಗೆ ನಾಯಂಡಹಳ್ಳಿ ರಿಂಗ್ ರಸ್ತೆಯಲ್ಲಿ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಕೂಡಲೇ ಅದರೊಳಗಿದ್ದವರು ಹೊರ ಬಂದರು. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದರೆ ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಕಿ ಹೊತ್ತಿಕೊಂಡ ತಕ್ಷಣವೇ ಸಮಯ ಪ್ರಜ್ಞೆ ಪ್ರದರ್ಶಿಸಿದ ಬಸ್ ಚಾಲಕ, ಧಗಧಗನೆ ಹೊತ್ತಿ ಉರಿಯುತ್ತಿದ್ದ ಕಾರು ನಿಂತಿದ್ದ ಸ್ಥಳದಿಂದ ಬಸ್ ನ್ನು ಚಲಾಯಿಸಿಕೊಂಡು ಹೋಗಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಇಳಿಸಿದ್ದಾಗಿ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಘಟನೆ ನಡೆದಾಗ ಬಸ್‌ನಲ್ಲಿ ಅನೇಕ ಪ್ರಯಾಣಿಕರಿದ್ದರು ಎನ್ನಲಾಗಿದೆ. 

ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಾಗ ಬಸ್ ನಿಲ್ದಾಣದಲ್ಲಿ ನಿಂತಿತ್ತು. ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. 

ಬೆಂಕಿ ಅವಘಡದ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

SCROLL FOR NEXT