ಬೆಳಗಾವಿ: ‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಹೇಳಿದರು.
ವಿಧಾನಸಭೆಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಜೆಡಿಎಸ್ನ ಕರೆಮ್ಮ ಜಿ. ನಾಯಕ ಎತ್ತಿದ್ದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಇದನ್ನೂ ಓದಿ: ಉಪಾಹರ ಸಭೆಯಲ್ಲಿ ಸಿಎಂ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ, ಮಾತನಾಡದಂತೆ ಹೈಕಮಾಂಡ್ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ
‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಬಿಡುಗಡೆ ಮಾಡಿರುವ ಅನುದಾನದ ಬಳಕೆ ಕುರಿತು ಪರಿಶೀಲನೆ ನಡೆಸಲಾಗುವುದು. ಅನುದಾನ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ನಿರ್ದಿಷ್ಟ ಪ್ರಕರಣಗಳಿದ್ದರೆ ದೂರು ಸಲ್ಲಿಸಬಹುದು. ಆ ಕುರಿತು ತನಿಖೆ ನಡೆಸುತ್ತೇವೆ’ ಎಂದು ಹೇಳಿದರು.
‘ದೇವದುರ್ಗ ತಾಲ್ಲೂಕಿನ ಹಲವು ದೇವಸ್ಥಾನಗಳ ಅಭಿವೃದ್ಧಿ, ದುರಸ್ತಿಗೆ ಕಳೆದ ವರ್ಷಗಳಲ್ಲಿ ಬಿಡುಗಡೆಯಾಗಿದ್ದ ಅನುದಾನ ದುರ್ಬಳಕೆ ಆಗಿದೆ. ಹಲವೆಡೆ ಕಾಮಗಾರಿಗಳನ್ನು ನಡೆಸದೇ ಬಿಲ್ ಪಾವತಿಸಲಾಗಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಅಕ್ರಮ ಎಸಗಿದ್ದಾರೆ’ ಎಂದು ದಾಖಲೆಗಳನ್ನು ಪ್ರದರ್ಶಿಸಿದರು.