ರಾಜ್ಯ

ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವ ಕುರಿತು ಸ್ಪೀಕರ್ ನಿರ್ಧರಿಸುತ್ತಾರೆ: ಸಿಎಂ ಸಿದ್ದರಾಮಯ್ಯ

Ramyashree GN

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಂಡಿರುವ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆಯುವ ಬಗ್ಗೆ ಸ್ಪೀಕರ್ ನಿರ್ಧರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಭಾವಚಿತ್ರವನ್ನು ಅಳವಡಿಸಲಾಗಿತ್ತು.

2022ರ ಡಿಸೆಂಬರ್‌ನಲ್ಲಿ ಸಾವರ್ಕರ್ ಅವರ ಭಾವಚಿತ್ರದ ಅನಾವರಣವು ಆಗಿನ ವಿರೋಧ ಪಕ್ಷವಾದ ಕಾಂಗ್ರೆಸ್‌ನಿಂದ ಟೀಕೆಗೆ ಗುರಿಯಾಗಿತ್ತು. ಇದು ಏಕಪಕ್ಷೀಯ ನಿರ್ಧಾರ ಎಂದು ಆರೋಪಿಸಿತ್ತು.

ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕಲಾಗುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಇದು ಸ್ಪೀಕರ್‌ಗೆ (ನಿರ್ಧರಿಸಲು) ಬಿಡಲಾಗಿದೆ' ಎಂದರು.

ವಿಧಾನಸಭೆಯ ಸಭಾಂಗಣದಲ್ಲಿ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಭಾವಚಿತ್ರ ಅಳವಡಿಸುವ ಪ್ರಸ್ತಾವನೆಯನ್ನು ಚರ್ಚಿಸಲಾಗುವುದು ಎಂದು ಸ್ಪೀಕರ್ ಯುಟಿ ಖಾದರ್ ಭಾನುವಾರ ಹೇಳಿದ್ದಾರೆ.

ಕಳೆದ ವರ್ಷ ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಬಿಆರ್ ಅಂಬೇಡ್ಕರ್, ಬಸವೇಶ್ವರ, ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಮತ್ತು ಸಾವರ್ಕರ್ ಅವರ ಭಾವಚಿತ್ರಗಳನ್ನು ಅಂದಿನ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಳಿಸಿದ್ದರು. 

ಆಗ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಕುವೆಂಪು, ನಾರಾಯಣ ಗುರು, ಶಿಶುನಾಳ ಷರೀಫ್, ನೆಹರು ಮತ್ತು ಬಾಬು ಜಗಜೀವನ್ ರಾಮ್ ಅವರಂತಹ ರಾಷ್ಟ್ರ ಮತ್ತು ರಾಜ್ಯದ ಹಲವಾರು ಪ್ರಮುಖರ ಚಿತ್ರಗಳನ್ನು ಹಿಡಿದು 'ಸುವರ್ಣ ವಿಧಾನ ಸೌಧ'ದ ಹೊರಗೆ ಪ್ರತಿಭಟನೆ ನಡೆಸಿದ್ದರು.

SCROLL FOR NEXT