ರಾಜ್ಯ

ಹಳೆ ಪಿಂಚಣಿ ಯೋಜನೆ ಜಾರಿಗೆ ಹಲವು ಅಡೆತಡೆಗಳಿವೆ: ಸಚಿವ ಕೃಷ್ಣ ಬೈರೇಗೌಡ

Manjula VN

ಬೆಳಗಾವಿ: ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡುವುದು ವಿಳಂಬವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಪರಿಷತ್ತಿಗೆ ಗುರುವಾರ ಹೇಳಿದರು.

ಸದಸ್ಯರಾದ ಮರಿತಿಬ್ಬೇಗೌಡ, ಎಸ್.ವಿ.ಸಂಕನೂರ, ಹೇಮಲತಾನಾಯಕ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಉತ್ತರಿಸಿದ ಕೃಷ್ಣಬೈರೇಗೌಡ ಅವರು, ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್)ಜಾರಿಗೆ ಬಂದ ಮೇಲೆ ಇದನ್ನು ಮುಂದುವರೆಸಬೇಕೆ? ಇಲ್ಲವೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಮಾಡಬೇಕೇ ಎಂಬುದರ ಬಗ್ಗೆ ವಿಸ್ತೃತ ವರದಿ ನೀಡುವಂತೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಇತ್ತರೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಈಗಾಗಲೇ ಮೂರು ಬಾರಿ ಸಭೆ ನಡೆಸಿದೆ. ಆದಷ್ಟು ಬೇಗ ವರದಿ ನೀಡುವಂತೆ ಸರ್ಕಾರ ಸಮಿತಿಗ ಸೂಚಿಸಿತ್ತು. ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡಲು ಸಾಧ್ಯವಾಗಿಲ್ಲ. ಆದಷ್ಟು ಬೇಗ ವರದಿ ನೀಡಲು ಸಂಬಂಧಪಟ್ಟವರಿಗೆ ಸೂಚನೆ ನೀಡುವುದಾಗಿ ಹೇಳಿದರು.

ಎನ್‍ಪಿಎಸ್‍ನಿಂದ ಕೆಲವು ನೌಕರರ ಭವಿಷ್ಯ ನಿಧಿ ಹಣ ಕೇಂದ್ರಕ್ಕೆ ಹೋಗುತ್ತದೆ. ನಾವು ಹಳೇ ಪಿಂಚಣಿ ವ್ಯವಸ್ಥೆ ಮುಂದುವರೆಸಿದರೆ ಈ ಹಣ ಬರುವುದಿಲ್ಲ. ಇದನ್ನು ಹೇಗೆ ಸರಿಪಡಿಸಬೇಕು ಎಂಬುದರ ಬಗ್ಗೆ ಸಮಿತಿ ಕೂಲಂಕುಷವಾಗಿ ಪರಿಶೀಲಿಸಲಿದೆ.

ರಾಜಸ್ಥಾನ ಸರ್ಕಾರ ನಮ್ಮ ನೌಕರರ ಪಿಎಫ್ ಹಣವನ್ನು ಹಿಂದಿರುಗಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿದೆ. ಇದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಕ್ರಮ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಮುಖ್ಯಮಂತ್ರಿ ಅವರು ಸೂಚಿಸಿದ್ದಾರೆ.

ಕೇಂದ್ರದಲ್ಲಿರುವ ನಮ್ಮ ನೌಕರರ ಹಣವನ್ನು ನಾವೇ ಕಟ್ಟಬೇಕು ಎಂದರೆ ಆರ್ಥಿಕವಾಗಿ ಹೊರೆಯಾಗಲಿದೆ. ಈ ಎಲ್ಲದರ ಬಗ್ಗೆಯೂ ಸಮಿತಿ ಪರಿಶೀಲಿಸಿ ವರದಿ ನೀಡಲಿದೆ. ಅದಾದ ನಂತರ ಸರ್ಕಾರ ವರದಿ ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

SCROLL FOR NEXT