ನಮ್ಮ ರಸ್ತೆ ಕಾರ್ಯಾಗಾರಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ. 
ರಾಜ್ಯ

ನಮ್ಮ ರಸ್ತೆ ಕಾರ್ಯಾಗಾರಕ್ಕೆ ಬಿಬಿಎಂಪಿ ಚಾಲನೆ: ಸಲಹೆ ನೀಡುವಂತೆ ಸಾರ್ವಜನಿಕರಿಗೆ ಆಹ್ವಾನ

ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯ ಡಾ.ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ನಡೆದ ನಮ್ಮ ರಸ್ತೆ ಪ್ರದರ್ಶನ, ಕಾರ್ಯಾಗಾರಕ್ಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಚಾಲನೆ ನೀಡಿದರು.

ಬೆಂಗಳೂರು: ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯ ಡಾ.ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ನಡೆದ ನಮ್ಮ ರಸ್ತೆ ಪ್ರದರ್ಶನ, ಕಾರ್ಯಾಗಾರಕ್ಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಚಾಲನೆ ನೀಡಿದರು.

ಬ್ಲೂಮ್‌ಬರ್ಗ್ ಫಿಲಾಂತ್ರಪಿಸ್ ಇನೀಶಿಯೇಟಿವ್ ಹಾಗೂ ಡಬ್ಲ್ಯುಆರ್‌ಐ ಇಂಡಿಯಾ ಸಹಭಾಗಿತ್ವದಲ್ಲಿ 2 ದಿನಗಳ ಕಾಲ ಬಿಬಿಎಂಪಿ ಕೇಂದ್ರ ಕಚೇರಿ ಡಾ.ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ನಡೆದ ನಮ್ಮ ರಸ್ತೆ (ನಮ್ಮ ಬೀದಿಗಳು) ಪ್ರದರ್ಶನ ಕಾರ್ಯಾಗಾರ ನಡೆಯುತ್ತಿದೆ. ಈ ಕಾರ್ಯಾಗಾರಕ್ಕೆ ತುಷಾರ್ ಗಿರಿನಾಥ್ ಅವರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಾಗಾರವನ್ನು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆಯ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ ಬಂದಂತಹ ಉತ್ತಮ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಿದರು.

ಬೆಂಗಳೂರಿನ ರಸ್ತೆಗಳನ್ನು ನಾಗರಿಕ ಬಳಕೆದಾರರಿಗೆ ಸುರಕ್ಷಿತವಾಗಿರಿಸಲು, ಎಲ್ಲಾ ತರಹದ ಬಳಕೆದಾರರಿಗೆ ಉಪಯೋಗಿಸುವಂತಾಗಲು, ಸ್ಥಿತಿ ಸ್ಥಾಪಕವಾಗಿಸಲು ಬೇಕಾದ ಎಲ್ಲ ಪರಿಹಾರಗಳನ್ನು ಆಲೋಚಿಸಲು ಹಾಗೂ ಸಲಹೆಗಳನ್ನು ಪಡೆಯಲು ಸೇರಿದಂತೆ ಇನ್ನಿತರ ಚರ್ಚೆಗಳು ಸಮಾವೇಶದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

'ನಮ್ಮ ರಸ್ತೆ' ಎಂಬ ವಿಶಿಷ್ಟ ಅಭಿಯಾನವು ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡಲು ಸಾಕಷ್ಟು ಸಹಕಾರಿಯಾಗಲಿದೆ. ಇದರಿಂದ ಬೆಂಗಳೂರಿನಲ್ಲಿ ಸಕ್ರಿಯ ಸಾರಿಗೆ ಮತ್ತು ಆರೋಗ್ಯಕರ ಜೀವನ ಶೈಲಿಯನ್ನು ಉತ್ತೇಜಿಸಲು, ಪಾದಚಾರಿಸ್ನೇಹಿ ಬೀದಿಗಳು, ಸೈಕ್ಲಿಂಗ್​ಗಾಗಿಯೇ ಮೀಸಲಾದ ಪ್ರತ್ಯೇಕ ಲೇನ್‌ಗಳು ಮತ್ತು ಹಸಿರುಮಯವಾದ ಸ್ಥಳಗಳನ್ನು ಸೃಷ್ಟಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ನಗರದಲ್ಲಿ ಸುರಕ್ಷಿತ ರಸ್ತೆಗಳನ್ನು ಸಿದ್ಧಪಡಿಸುವ ಸಲುವಾಗಿ ಕಾರ್ಯಾಗಾರದಲ್ಲಿ ಅನುಭವಗಳನ್ನು ಹಂಚಿಕೊಳ್ಳಲು ನಾಗರಿಕರು, ನಾಗರಿಕ ಸಂಸ್ಥೆಗಳು, ವಿನ್ಯಾಸಕರು, ವಿವಿಧ ಶೈಕ್ಷಣಿಕ ಸಂಸ್ಥೆಗಳ ಸಕ್ರಿಯ ಭಾಗವಹಿಸುವಿಕೆ ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಎಲ್ಲರಿಗೂ ಮುಕ್ತ ಪ್ರವೇಶವಿರಲಿದ್ದು, ಸಮಾವೇಶದಲ್ಲಿ ಎರಡು ದಿನ ಕಾಲ ಪಾಲಿಕೆಯ ಎಂಜಿನಿಯರ್​ಗಳ ತರಬೇತಿ ಕಾರ್ಯಾಗಾರ ಕೂಡಾ ನಡೆಯಲಿದೆ ಎಂದು ತಿಳಿಸಿದರು.

ಮೆಟ್ರೋ ಜಾಲ, ಉಪನಗರ ರೈಲು ಸೌಲಭ್ಯಗಳು ಮತ್ತು ಬಸ್‌ಗಳ ಸೇವೆಗಳ ತ್ವರಿತ ವಿಸ್ತರಣೆಯೊಂದಿಗೆ ಬೆಂಗಳೂರು ನಿರ್ಣಾಯಕ ಹಂತದಲ್ಲಿದೆ. ಈ ಎಲ್ಲ ಪ್ರಯತ್ನಗಳ ಯಶಸ್ಸು ಸಂಪೂರ್ಣ ಸಂಪರ್ಕಿತ ಸಾರಿಗೆ ವ್ಯವಸ್ಥೆಗಳು ಮತ್ತು ಪಾದಚಾರಿ ಮೂಲಸೌಕರ್ಯಗಳ ಯೋಜನೆ, ವಿನ್ಯಾಸ ಮತ್ತು ಕಾರ್ಯಾಚರಣೆ ಗೊಳಿಸುವಿಕೆ ಮೇಲೆ ಅವಲಂಬಿತವಾಗಿರುತ್ತದೆ. ಅಂತಹ ಸುಯೋಜಿತ ವ್ಯವಸ್ಥೆ ಜನರನ್ನು ಒಂದು ಸಾರಿಗೆ ವಿಧಾನದಿಂದ ಇನ್ನೊಂದು ಸಾರಿಗೆ ವಿಧಾನಕ್ಕೆ ಸರಳ ಮತ್ತು ಸುರಕ್ಷಿತವಾಗಿ ಬದಲಾಯಿಸಲು ಅನುಕೂಲ ಮಾಡಿಕೊಡುತ್ತದೆ. ಈ ನಿಟ್ಟಿನಲ್ಲಿ ಸಮಾವೇಶದಲ್ಲಿ ಚರ್ಚಿಸಿ ಬಂದಂತಹ ಉತ್ತಮ ಸಲಹೆಗಳನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಹೇಳಿದರು.

ಪ್ರಸಕ್ತ ಸಾಲಿನಲ್ಲಿ ಪಾಲಿಕೆಯು ಸುರಕ್ಷಾ 75 ಮಿಷನ್ 2023 ರಡಿ ನಗರದ 75 ನಿರ್ಣಾಯಕ ಜಂಕ್ಷನ್‌ಗಳಲ್ಲಿ ಮರು ವಿನ್ಯಾಸಗಳನ್ನು ಮಾಡುತ್ತಿದ್ದು, ಅಭಿವೃದ್ಧಿಯ ಕಾರ್ಯ ಪ್ರಗತಿಯಲ್ಲಿದೆ. ಇದು ಜನರ ಕೇಂದ್ರಿತ ಜಂಕ್ಷನ್ ವಿನ್ಯಾಸಗಳನ್ನು ರಚಿಸುವ ಗುರಿಯನ್ನು ಹೊಂದಿದ್ದು, ಇದರಿಂದ ಸುರಕ್ಷಿತ, ಪರಿಣಾಮಕಾರಿ ಮತ್ತು ಸುಲಲಿತವಾಗಿ ಪ್ರವೇಶಿಸುವಂತೆ ಮಾಡುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT