ರಾಜ್ಯ

ಧೀರಜ್ ಸಾಹು ಮೇಲೆ ಐಟಿ ದಾಳಿ: ಕೇಂದ್ರವು ಕಾಂಗ್ರೆಸ್ ನಾಯಕರನ್ನೇ ಏಕೆ ಗುರಿಯಾಗಿಸಿಕೊಂಡಿದೆ; ಸಿದ್ದರಾಮಯ್ಯ

Ramyashree GN

ಬೆಂಗಳೂರು: ಜಾರ್ಖಂಡ್‌ನ ಕಾಂಗ್ರೆಸ್‌ ಸಂಸದ ಧೀರಜ್‌ ಪ್ರಸಾದ್‌ ಸಾಹು ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ 200 ಕೋಟಿ ರೂ. ಗೂ ಅಧಿಕ ಲೆಕ್ಕಕ್ಕೆ ಸಿಗದಷ್ಟು ನಗದು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ, ಕೇಂದ್ರವು ಕೇವಲ ಕಾಂಗ್ರೆಸ್‌ ಅನ್ನು ಗುರಿಯಾಗಿಸಿಕೊಂಡಿದೆ ಹೊರತು ಬಿಜೆಪಿಯನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜಾರ್ಖಂಡ್ ಮತ್ತು ಒಡಿಶಾದಲ್ಲಿ ರಾಜ್ಯಸಭಾ ಸಂಸದ ಧೀರಜ್ ಸಾಹುಗೆ ಸಂಬಂಧಿಸಿರುವ ಸ್ಥಳಗಳ ಮೇಲೆ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬಗ್ಗೆ ಅವರು ಪ್ರತಿಕ್ರಿಯಿಸಿದರು.

'ಅವರು (ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ) ಕೇವಲ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ಬಿಜೆಪಿ ನಾಯಕರ ಮೇಲೂ ದಾಳಿ ಮಾಡಲಿ. ಆಗ ಮಾತ್ರ ಅವರ ಬಳಿ ಎಷ್ಟು (ಅಕ್ರಮ ಸಂಪತ್ತು) ಇದೆ ಎಂದು ತಿಳಿಯುತ್ತದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.

ಆದಾಯ ತೆರಿಗೆ ಕಾಯ್ದೆ ಪ್ರಕಾರ, ಕಪ್ಪುಹಣವನ್ನು ಯಾರು ಕೂಡಿಟ್ಟರೂ ಅದು ತಪ್ಪು. ಐಟಿ ಇಲಾಖೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಆದರೆ, ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಕೇವಲ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದೆ ಎಂದರು.

ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡಿದೆ. ಬಿಜೆಪಿಯವರನ್ನು ಗುರಿಯಾಗಿಸಿಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರ ಮೇಲೆ ದಾಳಿ ಮಾಡಿದರೆ ಅಪಾರ ಹಣ ಸಿಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ಒಡಿಶಾ ಮೂಲದ ಬೌದ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ಮತ್ತು ಅದಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದಲ್ಲಿ ಇದುವರೆಗೆ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ಹುಡುಕಾಟದ ಭಾಗವಾಗಿ ಸಾಹು ಅವರಿಗೆ ಸಂಬಂಧಿಸಿರುವ ಸ್ಥಳಗಳಲ್ಲಿಯೂ ಶೋಧ ನಡೆಸಲಾಯಿತು.

ವಶಪಡಿಸಿಕೊಂಡ ಮೊತ್ತವು 290 ಕೋಟಿ ರೂ.ಗಳನ್ನು ತಲುಪುವ ನಿರೀಕ್ಷೆಯಿದೆ. ಇದು ಈವರೆಗಿನ ಕಾರ್ಯಾಚರಣೆಯಲ್ಲಿ ಪತ್ತೆಯಾದ ಅತಿಹೆಚ್ಚು ಕಪ್ಪುಹಣವಾಗಿದೆ ಎಂದು ಅವರು ಹೇಳಿದರು.

SCROLL FOR NEXT