ಶ್ವೇತಾ - ದರ್ಶನ್ 
ರಾಜ್ಯ

ಚಿಕ್ಕಮಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಗೆ ವಿಷ ನೀಡಿ ಕೊಂದ ಪಾಪಿ ಪತಿಯ ಬಂಧನ

ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ ಪತ್ನಿಗೆ ಆಹಾರದಲ್ಲಿ ಸೈನೈಡ್ ಬೆರೆಸಿ ಕೊಲೆ ಮಾಡಿದ ಆರೋಪದ ಮೇಲೆ 37 ವರ್ಷದ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಚಿಕ್ಕಮಗಳೂರು: ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ ಪತ್ನಿಗೆ ಆಹಾರದಲ್ಲಿ ಸೈನೈಡ್ ಬೆರೆಸಿ ಕೊಲೆ ಮಾಡಿದ ಆರೋಪದ ಮೇಲೆ 37 ವರ್ಷದ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಶ್ವೇತಾ(30) ಎಂಬ ಮಹಿಳೆ ಏಳು ವರ್ಷಗಳ ಹಿಂದೆ ಆರೋಪಿ ದರ್ಶನ್ ಅವರನ್ನು ಮದುವೆಯಾಗಿದ್ದರು ಮತ್ತು ಈ ದಂಪತಿಗೆ ನಾಲ್ಕು ವರ್ಷದ ಮಗನಿದ್ದಾನೆ.

ದರ್ಶನ್ ವೃತ್ತಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದು, ಬೆಂಗಳೂರಿನಲ್ಲಿ ಡಯಾಗ್ನೋಸ್ಟಿಕ್ ಕೇಂದ್ರಗಳನ್ನು ಹೊಂದಿದ್ದಾರೆ. ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದು, ಮೂರು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ದೇವವೃಂದ ಗ್ರಾಮಕ್ಕೆ ಬಂದಿದ್ದರು.

ಪತಿ ದರ್ಶನ್ ಅಕ್ರಮ ಸಂಬಂಧ ಹೊಂದಿರುವ ವಿಚಾರ ಪತ್ನಿಗೆ ತಿಳಿದ ನಂತರ ಅವರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿ ತನ್ನ ಪತ್ನಿಗೆ ಸೈನೈಡ್ ವಿಷ ಹಾಕಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಸೋಮವಾರ ಬೆಳಗ್ಗೆ ದರ್ಶನ್ ಸಹೋದರ, ಶ್ವೇತಾ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ  ಅವರ ಕುಟುಂಬಕ್ಕೆ ತಿಳಿಸಿದ್ದರು ಮತ್ತು ಪತಿ ಮನೆಯವರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದರು.

ಶ್ವೇತಾ ಮನೆಯವರು ದರ್ಶನ್ ಮನೆಗೆ ಬಂದು ನೋಡಿದಾಗ, ಶ್ವೇತಾ ಅವರ ದೇಹದಲ್ಲಿ ಸಣ್ಣ ಗಾಯದ ಗುರುತುಗಳು ಕಂಡು ಬಂದಿದ್ದು, ಭಾನುವಾರ ರಾತ್ರಿ ದರ್ಶನ್ ಮತ್ತು ಶ್ವೇತಾ ನಡುವಿನ ಜಗಳ ಆಕೆಯ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಿದ್ದಾರೆ. ನಂತರ ಈ ಸಂಬಂಧ ತಮ್ಮ ಮಗಳಿಗೆ ದರ್ಶನ್ ವಿಷ ಹಾಕಿ ಸಾಯಿಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮೃತಳ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಕೆಯ ಕರುಳಿನಲ್ಲಿ ವಿಷದ ಅಂಶ ಇರುವುದು ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆ ಕೊಲೆ ಪ್ರಕರಣ ದಾಖಲಿಸಿಕೊಂಡು ದರ್ಶನ್‌ನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT