ರಾಜ್ಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗೆ ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಮಿತಿ: ಡಿಸಿಎಂ ಡಿಕೆ ಶಿವಕುಮಾರ್

Manjula VN

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ದೇಶನ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿಗಳ ರಚನೆಯನ್ನು ಪೂರ್ಣಗೊಳಿಸಲು ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಗಡುವು ವಿಧಿಸಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ನಾಮನಿರ್ದೇಶನಗಳನ್ನು ಸಲ್ಲಿಸುವಂತೆ ನಾನು ನಮ್ಮ ಪಕ್ಷದ ಶಾಸಕರಿಗೆ ಸೂಚಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ನಿಗಮ ಮಂಡಳಿ ನೇಮಕ ವಿಚಾರ ಕುರಿತು ಮಾತನಾಡಿ, ನೇಮಕಗೊಂಡವರ ಪಟ್ಟಿಗೆ ಅನುಮೋದನೆ ಪಡೆಯಲು ಪಕ್ಷದ ಕೇಂದ್ರ ನಾಯಕರನ್ನು ಭೇಟಿ ಮಾಡಲು ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದೇವೆ ಎಂದು ತಿಳಿಸಿದರು.

ಬಳಿಕ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಸಿಲುಕಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಬಿಜೆಪಿ ಆರೋಪಗಳನ್ನು ತಳ್ಳಿಹಾಕಿದ ಅವರು, ಪ್ರತಾಪ್ ಸಿಂಹ ಅವರನ್ನು ಬಲೆಗೆ ಬೀಳಿಸಲು ಅವರೇನು ಚಿಕ್ಕ ಮಗು ಅಲ್ಲ ಎಂದರು.

SCROLL FOR NEXT