ಸಂಗ್ರಹ ಚಿತ್ರ 
ರಾಜ್ಯ

ವಸತಿ ರಹಿತರಿಗೆ ಸೂರು: ಆಶ್ರಯ ಯೋಜನೆ ಜಾರಿಗೊಳಿಸಲಾಗದು- ಹೈಕೋರ್ಟ್‌

ವಸತಿ ರಹಿತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷಿ ಯೋಜನೆಯಾದ ಆಶ್ರಯ ಯೋಜನೆಯನ್ನು ಜಾರಿಗೊಳಿಸಲಾಗದು ಎಂದು ಹೈಕೋರ್ಟ್‌ ಹೇಳಿದೆ.

ಬೆಂಗಳೂರು: ವಸತಿ ರಹಿತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷಿ ಯೋಜನೆಯಾದ ಆಶ್ರಯ ಯೋಜನೆಯನ್ನು ಜಾರಿಗೊಳಿಸಲಾಗದು ಎಂದು ಹೈಕೋರ್ಟ್‌ ಹೇಳಿದೆ.

ಆಶ್ರಯ ಈ ಯೋಜನೆಯಡಿ ಹಂಚಿಕೆಯಾದ ನಿವೇಶನಗಳಿಗೆ ಹಕ್ಕು ಪತ್ರ ವಿತರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಮೈಸೂರಿನ ಶ್ರೀರಾಮಪುರ ಪಟ್ಟಣ ಪಂಚಾಯಿತಿ ನಿವಾಸಿ ಬಿ ರೂಪಾ ಸೇರಿದಂತೆ 40 ನಿವಾಸಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಆಶ್ರಯ ಯೋಜನೆ ಕುರಿತಂತೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಉಲ್ಲೇಖಿಸಿ, ಈ ಆದೇಶವನ್ನು ಹೊರಡಿಸಿದೆ.

ಸಂವಿಧಾನದ 162ನೇ ವಿಧಿಯ ಅಡಿಯಲ್ಲಿ ಲಭ್ಯವಾದ ಕಾರ್ಯಕಾರಿ ಅಧಿಕಾರ ಬಳಕೆ ರಾಜ್ಯ ಸರ್ಕಾರವು ಆಶ್ರಯ ಯೋಜನೆ ರೂಪಿಸಿದೆ. ಸರ್ಕಾರವು ತನ್ನ ಅಧಿಕಾರ ವ್ಯಾಪ್ತಿ ಮೀರಿ ಆಶ್ರಯ ಯೋಜನೆ ರೂಪಿಸಿದೆ. ಇದರಿಂದ ಯೋಜನೆಯನ್ನು ಜಾರಿ ಮಾಡಲಾಗದು ಮತ್ತು ಯೋಜನೆಯನ್ನು ರದ್ದುಪಡಿಸಲಾಗಿದೆ ಎಂಬುದಾಗಿ ಡಾ. ಬಿ ಆರ್ ಅಂಬೇಡ್ಕರ್ ದಲಿತ ಮತ್ತು ಹಿಂದುಳಿದ ಅಲ್ಪಸಂಖ್ಯಾತರ ಗ್ರಾಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ಸರ್ಕಾರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಘೋಷಣೆ ಮಾಡಿದೆ. ಈ ಕಾನೂನಿನ ಘೋಷಣೆಯು ಗಂಗಾಜಲದಂತೆ ಸ್ಪಷ್ಟವಾಗಿರುವ ಕಾರಣ, ಆಶ್ರಯ ಯೋಜನೆಯಡಿ ಮೇಲ್ಮನವಿದಾರರಿಗೆ ಯಾವುದೇ ಪರಿಹಾರ ಕಲ್ಪಿಸಲಾಗುವುದಿಲ್ಲ ಎಂದು ವಿಭಾಗೀಯ ಪೀಠ ತನ್ನ ಆದೇಶಲ್ಲಿ ತಿಳಿಸಿದೆ.

ಮೇಲ್ಮನವಿಗೆ ಸಂಬಂಧಿಸಿದ ದಾಖಲೆಗಳ ಮತ್ತು ಏಕ ಸದಸ್ಯ ಪೀಠದ ಆದೇಶವನ್ನು ಪರಿಶೀಲಿಸಿದ ವಿಭಾಗೀಯ ಪೀಠವು ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತು. ಏಕ ಸದಸ್ಯ ಪೀಠದ ಆದೇಶವು ಸೂಕ್ತವಾಗಿದೆ. ಮತ್ತೊಂದೆಡೆ ಆಶ್ರಯ ಯೋಜನೆ ಜಾರಿ ಮಾಡಲಾಗದು ಎಂಬುದಾಗಿ ಸುಪ್ರೀಂ ಕೋರ್ಟ್‌ ಹೇಳಿದೆ. ಹಾಗಾಗಿ, ಮೇಲ್ಮನವಿದಾರರಿಗೆ ಯಾವುದೇ ಪರಿಹಾರ ಕಲ್ಪಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಮೇಲ್ಮನವಿಯನ್ನು ವಜಾಗೊಳಿಸಿದೆ.

ಮೇಲ್ಮನವಿದಾರರ ಪರ ವಕೀಲರು, ಆಶ್ರಯ ಯೋಜನೆಯಡಿ ನಿವೇಶನಗಳನ್ನು ಮಂಜೂರು ಮಾಡಿರುವುದರಿಂದ ಸಹಜವಾಗಿ ಹಕ್ಕುಪತ್ರವನ್ನು ಹಂಚಿಕೆ ಮಾಡಬೇಕಿದೆ ಎಂದು ವಾದ ಮಂಡಿಸಿದ್ದರು.

ಏನಿದು ಪ್ರಕರಣ?
ಮೈಸೂರು ಕಸಬಾ ಹೋಬಳಿಯ ಶ್ರೀರಾಮಪುರದ ಪಟ್ಟಣ ಪಂಚಾಯತಿ ನಿವಾಸಿಗಳಾದ ಮೇಲ್ಮನವಿದಾರಾದ ಪ್ರೇಮಾ ಮತ್ತು ಮೈಸೂರಿನ ಇತರ 39 ನಿವಾಸಿಗಳು 2011ರಲ್ಲಿ ಆಶ್ರಯ ಯೋಜನೆಯಡಿ ತಮಗೆ ಮಂಜೂರಾದ ನಿವೇಶನಗಳಿಗೆ ಸಂಬಂಧಿಸಿದಂತೆ ಹಕ್ಕು ಪತ್ರಗಳನ್ನು ನೀಡುವಂತೆ ತಾಲ್ಲೂಕು ಪಂಚಾಯಿತಿಗೆ ಮನವಿ ಮಾಡಿದ್ದರು.

ಆ ಮನವಿಯನ್ನು ತಿರಸ್ಕರಿಸಿ 2019ರ ಫೆಬ್ರವರಿ 21ರಂದು ತಾಲ್ಲೂಕು ಪಂಚಾಯಿತಿ ಪತ್ರ ವ್ಯವಹಾರ ನಡೆಸಿತ್ತು. ಅದನ್ನು ರದ್ದುಪಡಿಸಲು ಮತ್ತು ಹಕ್ಕು ಪತ್ರ ಹಂಚಿಕೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ 2019ರಲ್ಲಿ ರೂಪಾ ಮತ್ತಿತರ ಫಲಾನುಭವಿಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಿ 2023ರ ಫೆಬ್ರುವರಿ 21ರಂದು ಏಕಸದಸ್ಯ ಪೀಠದ ಆದೇಶಿಸಿತ್ತು.

ಶ್ರೀರಾಮಪುರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಿ ರಾಜ್ಯ ನಗರಾಭಿವೃದ್ಧಿ ಇಲಾಖೆ 2021ರ ಮಾರ್ಚ್‌ 26ರಂದು ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ಹೊರಬೀಳುವ ವೇಳೆಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿರಲಿಲ್ಲ. ಇದರಿಂದ ಆಶ್ರಯ ನಿವೇಶನಗಳ ಹಂಚಿಕೆ ಪ್ರಕ್ರಿಯೆಯನ್ನು ಗ್ರಾಮ ಪಂಚಾಯಿತಿ ಮುಂದುರಿಸಿಲ್ಲ.

ಪರಿಣಾಮ ಶ್ರೀರಾಮಪುರ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಫಲಾನುಭವಿಗಳ ಆಯ್ಕೆ ಮತ್ತು ಆಶ್ರಯ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ಹೊಸದಾಗಿ ಕೈಗೊಳ್ಳಬೇಕಿತ್ತು. ಆದರೆ, ಶ್ರೀರಾಮಪುರ ಗ್ರಾಮ ಪಂಚಾಯಿತಿ ಸದ್ಯ ಅಸ್ವಿತ್ವದಲ್ಲಿ ಇಲ್ಲದ ಕಾರಣ ಆಶ್ರಯ ಯೋಜನೆ ನಿವೇಶನಗಳ ಹಂಚಿಕೆಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಮುಂದುವರಿಸುವ ಪರಿಸ್ಥಿತಿಯಲ್ಲಿ ಸರ್ಕಾರ ಇಲ್ಲ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ. ಇದರಿಂದ ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ ಎಂದು ಏಕ ಸದಸ್ಯ ಪೀಠ ತನ್ನ ಆದೇಶದಲ್ಲಿ ತಿಳಿಸಿತ್ತು. ಈ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT