ಬೆಂಗಳೂರು: ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ನಿಯಮಗಳನ್ನು ಸಮರ್ಪಕವಾಗಿ ಜಾರಿ ಮಾಡದಿದ್ದರಿಂದ ಕನ್ನಡ ಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನವೀಕೃತ ಕುವೆಂಪು ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕರ್ತರನ್ನು ಬೆಂಬಲಿಸುವುದು ಇಂದಿನ ಅಗತ್ಯವಾಗಿದೆ, ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಮತ್ತಿತರರನ್ನು ಜೈಲಿಗೆ ಕಳುಹಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕನ್ನಡಪರ ಹೋರಾಟಗಾರರ ಮೇಲಿನ ಸುಮಾರು 2 ಸಾವಿರ ಪ್ರಕರಣಗಳನ್ನು ವಾಪಸ್ ಪಡೆಯಲಾಗಿತ್ತು. ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕೆಂಬ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.
ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರದ ಕರ್ನಾಟಕ ಪಠ್ಯ ಪುಸ್ತಕದಲ್ಲಿ ಕನ್ನಡ ಭಾಷೆ, ಇತಿಹಾಸ, ಸಂಸ್ಕೃತಿ ಬಗ್ಗೆ ವಿಸ್ತೃತ ಮಾಹಿತಿ!
ನಮ್ಮ ಸರ್ಕಾರದ ಅವಧಿಯಲ್ಲಿ ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ಮಸೂದೆ-2022 ಜಾರಿಗೊಳಿಸಿದ್ದೇವು. ಇದನ್ನು ಹಾಲಿ ಸರ್ಕಾರ ಅನುಷ್ಠಾನ ಮಾಡದಿದ್ದರಿಂದ ಕನ್ನಡಪರ ಹೋರಾಟಗಾರರು ಪ್ರತಿಭಟನೆಗೆ ಇಳಿದಿದ್ದಾರೆ. ಕನ್ನಡ ನಿತ್ಯ ನಿರಂತರ ಆಗಬೇಕಾದರೆ ಕನ್ನಡಡಿಗರು ಜಾಗೃತರಾಗಿರಬೇಕು ಎಂದು ತಿಳಿಸಿದರು. ಕನ್ನಡ ನಾಮಫಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸದ ಕಾರಣ ಪ್ರಸ್ತುತ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಹೇಳಿದರು.