ರಾಜ್ಯ

ಪ್ರಕರಣ ದಾಖಲಿಸುವಲ್ಲಿ ನಿರ್ಲಕ್ಷ್ಯ: ಇನ್ಸ್'ಪೆಕ್ಟರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

Manjula VN

ಬೆಂಗಳೂರು: ಕಳ್ಳತನ ಪ್ರಕರಣವೊಂದರ ಕುರಿತಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸೂಚನೆಯ ಹೊರತಾಗಿಯೂ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ತೋರಿದ್ದ ಕಾಟನ್‌ಪೇಟೆ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಕೆ.ವೈ. ಪ್ರವೀಣ್ ವಿರುದ್ಧ ಇಲಾಖಾವಾರು ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕಳ್ಳತನ ಆರೋಪದ ಬಗ್ಗೆ ತನಿಖೆಗೆ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. 2022ರ ಮೇ 4ರಂದೇ ಆದೇಶ ತಲುಪಿದರೂ ಎಫ್ಐಆರ್ ದಾಖಲಿಸಲು ಪಿಐ ಕೆ.ವೈ.ಪ್ರವೀಣ್​ ಐದೂವರೆ ತಿಂಗಳು ವಿಳಂಬ ಮಾಡಿದ್ದರು.

ಠಾಣಾಧಿಕಾರಿ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕೋರ್ಟ್ ಆದೇಶದಂತೆ ಎಫ್ಐಆಪ್ ದಾಖಲಿಸುವುದು ಠಾಣಾಧಿಕಾರಿ ಕರ್ತವ್ಯ. ಆದರೆ, ಹಾಗೆ ಮಾಡದೆ ಕರ್ತವ್ಯ ಲೋಪ ಮಾಡಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ಕೃತ್ಯಕ್ಕೆ ಕಾರಣವಾದ ಅಧಿಕಾರಿ ಕೆ.ವೈ ಪ್ರವೀಣ್ ಕಡತ ನಾಪತ್ತೆಯಾಗಿತ್ತು. ಹೀಗಾಗಿ ಪ್ರಕರಣ ದಾಖಲಿಸಲು ವಿಳಂಬವಾಗಿದೆ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಅಂದಮಾತ್ರಕ್ಕೆ ಪ್ರಕರಣವನ್ನು ಕೈ ಬಿಡುವುದಕ್ಕೆ ಸಾಧ್ಯವಿಲ್ಲ. ಪೊಲೀಸ್ ಇಲಾಖೆ ಪ್ರಮಾಣ ಪತ್ರದಲ್ಲಿ ತಿಳಿಸಿರುವಂತೆ ಅಧಿಕಾರಿಯ ಕರ್ತವ್ಯಲೋಪ ಒಪ್ಪಿಕೊಂಡಂತಾಗಿದೆ. ಹೀಗಾಗಿ ಆ ಅಧಿಕಾರಿಯ ವಿರುದ್ಧ ಇಲಾಖಾವಾರು ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

ಪ್ರಕರಣದ ಆರೋಪಿಯಾಗಿರುವ ವಿನಾಯಕ ಮತ್ತು ಅರ್ಜಿದಾರರ ನಡುವೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಿವಿಲ್ ದಾವೆ ವಿಚಾರಣೆಯ ಹಂತದಲ್ಲಿದೆ. ಈ ನಡುವೆ ಆರೋಪಿ 2021ರ ಮಾರ್ಚ್ 26 ರಂದು ಅರ್ಜಿದಾರರ ಮನೆ ಬಾಗಿಲು ಮುರಿದು ಹಲವು ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿದ್ದರು. ಈ ಕುರಿತಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸೂಚನೆ ನೀಡುವಂತೆ ಕೋರಿ ಅರ್ಜಿದಾರರ ಪ್ರಕಾಶ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ದೂರಿನ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 2022 ಮಾರ್ಚ್ 4 ರಂದು ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವಂತೆ ಕಾಟನ್‌ಪೇಟೆ ಪೊಲೀಸ್ ಠಾಣೆಗೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತ್ತು. ಈ ಸಂಬಂಧ ಆದೇಶದ ಪ್ರತಿಯನ್ನು 2022ರ ಮೇ 4 ರಂದು ಸ್ವೀಕರಿಸಿದ್ದ ಕಾಟನ್ ಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಲು ಮುಂದಾಗಿರಲಿಲ್ಲ. ಮತ್ತೆ ಅರ್ಜಿ ವಿಚಾರಣೆಗೆ ಬಂದ ಸಂದರ್ಭದಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸ್ ಠಾಣೆಗೆ ಮತ್ತೊಮ್ಮೆ ನೆನಪು ಮಾಡಿತ್ತು. ಆದರೂ ಪ್ರಕರಣ ದಾಖಲಿಸಿರಲಿಲ್ಲ. ಇದಾದ ಸುಮಾರು ಐದೂವರೆ ತಿಂಗಳ ಬಳಿಕ ಪ್ರಕರಣ ದಾಖಲಿಸಲಾಗಿತ್ತು.

ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಿದ್ದ ಪೊಲೀಸ್ ಇಲಾಖೆ, ನ್ಯಾಯಾಲಯದ ಸೂಚನೆ 2022ರ ಮೇ 4 ರಂದು ಬಂದಿದ್ದರೂ, ಈ ಸಂಬಂಧ ಕಡತ ಇನ್‌ಸ್ಪೆಕ್ಟರ್ ಟೇಬಲ್‌ನಿಂದ ನಾಪತ್ತೆಯಾಗಿತ್ತು. ಇದೀಗ ಕಡತ ಪತ್ತೆಯಾಗಿದ್ದು ತಕ್ಷಣ ಪ್ರಕರಣ ದಾಖಲಿಸಲಾಗಿದೆ ಎಂದು ವಿಳಂಬಕ್ಕೆ ಸಬೂಬು ನೀಡಿತ್ತು. ಇದಕ್ಕೆ ಕಾರಣವಾದ ಪೊಲೀಸ್ ಇನ್‌ಸ್ಪೆಕ್ಟರ್‌ರನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಗಳಿಸುವುದಿಲ್ಲ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಿದ್ದರು.

SCROLL FOR NEXT