ಬೆಂಗಳೂರು: ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ ವೇರ್ ಇಂಜಿನಿಯರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ನಾಗೇನಹಳ್ಳಿ ನಿವಾಸಿ ರಮೇಶ್ (28) ಮೃತ ದುರ್ದೈವಿ. ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ರಮೇಶ್ ಭಾನುವಾರ ತಡರಾತ್ರಿ 2.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುವಾಗ ಮಾರ್ಗ ಮಧ್ಯೆ ನಾಗೇನಹಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದೆ.
ರಮೇಶ್ ವೇಗವಾಗಿ ವಾಹನ ಚಾಲನೆ ಮಾಡಿಕೊಂಡು ಬರುವ ವೇಳೆ ನಾಗೇನಹಳ್ಳಿ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗದ ಪಾದಚಾರಿ ಮಾರ್ಗದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮರಕ್ಕೆ ಗುದ್ದಿ ರಸ್ತೆಗೆ ಬಿದ್ದ ರಮೇಶ್ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹೆಣ್ಣಬರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.