ರಾಜ್ಯ

ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ; ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಯಕ್ಷಗಾನ ಕಲಿಸಬೇಕು- ಶೋಭಾ ಕರಂದ್ಲಾಜೆ

Ramyashree GN

ಉಡುಪಿ: ಉಡುಪಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉಡುಪಿ ಮತ್ತು ಇಡೀ ಕರಾವಳಿ ಭಾಗವು ಈ ಭಾಗದ ಜೀವನಾಡಿಯಾಗಿರುವ ಯಕ್ಷಗಾನ ಮೇಳಗಳಿಗೆ ಸದಾ ಬೆಂಬಲ ನೀಡಿದೆ. ಯಕ್ಷಗಾನಕ್ಕೆ ಅಯಸ್ಕಾಂತೀಯ ಆಕರ್ಷಣೆ ಇದ್ದು, ಪುರಾಣ, ಜನಪದ ಸಾಹಿತ್ಯವನ್ನು ಅರ್ಥ ಮಾಡಿಕೊಳ್ಳಲು ಯುವಕು ಹೆಚ್ಚಿನ ಸಂಖ್ಯೆಯಲ್ಲಿ ಕಲಾ ಪ್ರಕಾರದತ್ತ ಆಕರ್ಷಿತರಾಗಬೇಕು ಎಂದರು.

ವಿದ್ಯಾರ್ಥಿಗಳು ತಮ್ಮ ಸಂಸ್ಕೃತಿ, ಇತಿಹಾಸ ಮತ್ತು ಪೌರಾಣಿಕ ಕಥೆಗಳ ಬಗ್ಗೆ ತಿಳಿದುಕೊಳ್ಳಲು ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಯಕ್ಷಗಾನವನ್ನು ಕಲಿಸಬೇಕು. ಯಕ್ಷಗಾನ ಕಲೆಯನ್ನು ಕೇವಲ ಧಾರ್ಮಿಕ ನೆಲೆಯಲ್ಲಿ ನೋಡಬಾರದು. ಕಲಾ ಪ್ರಕಾರದ ಶ್ರೀಮಂತ ಪರಂಪರೆಯನ್ನು ಉಳಿಸುವುದು ಅನಿವಾರ್ಯವಾಗಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಭವ್ಯ ಮೆರವಣಿಗೆಯೂ ನಡೆಯಿತು.

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮಾಜಿಕ ಕಾರ್ಯಕರ್ತ ನಾಡೋಜ ಜಿ ಶಂಕರ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಂಗವಾಗಿ ಯಕ್ಷಗಾನಕ್ಕೆ ಸಂಬಂಧಿಸಿದ ವಿವಿಧ ಮಳಿಗೆಗಳನ್ನು ತೆರೆಯಲಾಗಿದೆ. ಕಾರ್ಯಕ್ರಮದ ಅಧ್ಯಕ್ಷ ಎಂ ಪ್ರಭಾಕರ ಜೋಶಿ ಇದ್ದರು.

ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಎಚ್ಇ) ಪ್ರೊ ಚಾನ್ಸೆಲರ್ ಎಚ್ ಎಸ್ ಬಲ್ಲಾಳ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

SCROLL FOR NEXT