ರಾಜ್ಯ

ಯಕ್ಷಗಾನ ಕಲಾವಿದ, ಖ್ಯಾತ ಸಾಹಿತಿ, ಹರಿದಾಸ ಅಂಬಾತನಯ ಮುದ್ರಾಡಿ ವಿಧಿವಶ

Shilpa D

ಉಡುಪಿ: ಸಾಹಿತಿ, ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನವರಾಗಿರುವ ಮುದ್ರಾಡಿ ಅವರು ಹತ್ತಾರು ಮೌಲಿಕ ಗ್ರಂಥಗಳನ್ನು ಸಂಪಾದನೆ ಮಾಡಿದ್ದಾರೆ. ಹರಿದಾಸ, ಜಿನದಾಸ, ಏಸು ದಾಸ, ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಛಾಫು ಮೂಡಿಸಿದ್ದರು. ಹಲವು ಯಕ್ಷಗಾನ ಪ್ರಸಂಗಗಳ ಕರ್ತೃ ಆಗಿರುವ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಕಳೆದ ವಾರ ಉಡುಪಿಯಲ್ಲಿ ಜರುಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದದಲ್ಲಿ ಪಾಲ್ಗೊಂಡದ್ದು ಅವರ ಕೊನೆಯ ಕಾರ್ಯಕ್ರಮವಾಗಿತ್ತು. ಈ ಸಂದರ್ಭದಲ್ಲಿ 'ಯಕ್ಷಗಾನ ಮತ್ತು ಹರಿಕಥೆ ಒಂದು ತೌಲನಿಕ ಅಧ್ಯಯನ' ಪುಸ್ತಕವನ್ನು ಪ್ರಕಟಿಸಲಾಗಿತ್ತು.

ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಅವರಿಗೆ ಅರ್ಹವಾಗಿ ಪ್ರಾಪ್ತಿಯಾಗಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ. ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ವೃಂದವನ್ನು ಅಗಲಿದ್ದಾರೆ.

1935ರ ಜೂನ್ 4ರಂದು ಕಾರ್ಕಳದ ಮುದ್ರಾಡಿಯಲ್ಲಿ ಜನಿಸಿದ ಅಂಬಾತನಯ ಮುದ್ರಾಡಿ ಅವರ ಮೂಲ ಹೆಸರು ಕೇಶವ ಶೆಟ್ಟಿಗಾರ್. ಶಾಲಾ ವಿದ್ಯಾಭ್ಯಾಸ ಎಂಟನೆಯ ತರಗತಿಯವರೆಗೆ ಪಡೆದಿದ್ದರು. ಸ್ವಂತ ಆಸಕ್ತಿಯಿಂದ ಅಧ್ಯಯನ ಮಾಡಿ ಬೆಳೆದ ವ್ಯಕ್ತಿತ್ವ ಅಂಬಾತನಯರದು.

SCROLL FOR NEXT