ರಾಜ್ಯ

ರಾಜ್ಯದಲ್ಲಿ ಬಂಧಿತ ಶಂಕಿತ ಭಯೋತ್ಪಾದಕ ಕಾಂಗ್ರೆಸ್ ನಾಯಕನ ಮಗ? ವೈರಲ್ ಆದ ಫೋಟೊಗಳು

Ramyashree GN

ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿರುವ ಶಂಕಿತ ಭಯೋತ್ಪಾದಕರಲ್ಲಿ ಓರ್ವ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಎಂದು ತಿಳಿದುಬಂದಿದೆ. ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರೊಂದಿಗಿನ ಆತನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಈ ಬೆಳವಣಿಗೆಯು ಚುನಾವಣಾ ಕಣದಲ್ಲಿರುವ ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. ಗುರುವಾರ ನಡೆಸಿದ ದಾಳಿಯಲ್ಲಿ ಎನ್‌ಐಎ ಬಂಧಿಸಿದ ಆರು ಜನರಲ್ಲಿ ರಿಶಾನ್ ಕೂಡ ಒಬ್ಬ.

ರಾಜ್ಯದಲ್ಲಿ ಐಸಿಸ್ ಜಾಲಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ರಾಜ್ಯದಲ್ಲಿ ಭಯೋತ್ಪಾದನೆಗೆ ಸಂಬಂಧಿತ ಹಲವು ಪ್ರಕರಣಗಳನ್ನು ತನಿಖೆ ನಡೆಸುತ್ತಿರುವ ಎನ್‌ಐಎ, ರಾಜ್ಯದಲ್ಲಿ ಭಯೋತ್ಪಾದನೆಯನ್ನು ಹುಟ್ಟುಹಾಕುವ ಜಾಲದ ಮೂಲವನ್ನು ಹುಡುಕಲು ತನಿಖೆ ನಡೆಸುತ್ತಿದೆ.

ರಿಶಾನ್ ಅವರೊಂದಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇರುವ ಫೋಟೊ ವೈರಲ್ ಆಗಿದೆ.

ಎನ್‌ಐಎ ಬಂಧಿಸಿರುವ ಶಂಕಿತ ಆರೋಪಿಗಳಲ್ಲಿ ಒಬ್ಬನಾದ ರಿಶಾನ್ ಉಡುಪಿ ಜಿಲ್ಲೆಯ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತಾಜುದ್ದೀನ್ ಅವರ ಪುತ್ರ ಎಂದು ಉಡುಪಿಯ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

'ಆತನನ್ನು ಈಗಾಗಲೇ ಬಂಧಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಗೊಂದಲದ ಮಾಹಿತಿಗಳು ಹೊರಬರುತ್ತಿವೆ. ತನಿಖೆಯನ್ನು ತೀವ್ರಗೊಳಿಸುವಂತೆ ಸರ್ಕಾರ ಮತ್ತು ಎನ್ಐಎಗೆ ಒತ್ತಾಯಿಸುತ್ತೇನೆ. ಅದರಲ್ಲೂ ವಿಶೇಷವಾಗಿ ಕರಾವಳಿ ಪ್ರದೇಶದಲ್ಲಿ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಇಂತಹ ಅನೇಕ ವ್ಯಕ್ತಿಗಳ ಮೇಲೆ ಅನುಮಾನವಿದೆ' ಎಂದು ಅವರು ಹೇಳಿದರು.

'ನಾನು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಲು ಬಯಸುತ್ತೇನೆ. ತಾಜುದ್ದೀನ್ ಸಾಮಾನ್ಯ ಕಾರ್ಯಕರ್ತನಲ್ಲ. ಆತ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ. ಪಕ್ಷದ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಅಲ್ಲದೆ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಉಳ್ಳಾಲ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಅವರಿಗೆ ಅತ್ಯಂತ ಆಪ್ತರು' ಎಂದು ಆರೋಪಿಸಿದ್ದಾರೆ.

'ಪಕ್ಷದ ಪದಾಧಿಕಾರಿಯೊಬ್ಬರ ಮಗ ಭಯೋತ್ಪಾದನೆ ಪ್ರಕರಣದಲ್ಲಿ ಸಿಕ್ಕಿಬಿದ್ದರೆ ಅದರ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷವೇ ಹೊರಬೇಕು' ಎಂದರು.

SCROLL FOR NEXT