ಮೈಸೂರು: ವಂಚನೆ, ಅತ್ಯಾಚಾರ, ವೇಶ್ಯವಾಟಿಕೆ ಇತ್ಯಾದಿ ಪ್ರಕರಣಗಳಲ್ಲಿ ಸಿಲುಕಿಕೊಂಡಿರುವ ಸ್ಯಾಂಟ್ರೋ ರವಿ ಪ್ರಕರಣ ಕುರಿತು ತನಿಖೆ ಚುರುಕುಗೊಳಿಸಿರುವ ಮೈಸೂರು ನಗರ ಪೊಲೀಸರು, ರವಿ ಬಂಧನಕ್ಕಾಗಿ 11 ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆಂದು ತಿಳಿದುಬಂದಿದೆ.
ಉಪ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಎಂ ಮುತ್ತುರಾಜ್ ಮಾತನಾಡಿ, ಸ್ಯಾಂಟ್ರೋ ರವಿ ಬಂಧನಕ್ಕಾಗಿ 11 ವಿಶೇಷ ತಂಡಗಳನ್ನು ರಚಿಸಲಾಗಿದೆ. ಆರೋಪಿ ಪತ್ತೆಗಾಗಿ ಈ ತಂಡಗಳು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರತಿ ತಂಡದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ 6-10 ಪೊಲೀಸರು ಇದ್ದಾರೆಂದು ಮಾಹಿತಿ ನೀಡಿದ್ದಾರೆ.
ಸ್ಯಾಂಟ್ರೋ ರವಿಗಾಗಿ ಬೆಂಗಳೂರು, ರಾಮನಗರ, ಮಂಡ್ಯ ಮತ್ತು ಮೈಸೂರಿನಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೆಲವು ತಂಡಗಳು ಕೇರಳ, ತಮಿಳುನಾಡು, ಆಂಧ್ರಪ್ರದೇಶಗಳಿಗೂ ಭೇಟಿ ನೀಡಿವೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಸ್ಯಾಂಟ್ರೋ ರವಿ ಸರ್ಕಾರದ 'ಚೀಫ್ ಬ್ರೋಕರ್': ಕಾಂಗ್ರೆಸ್
ಈ ನಡುವೆ ನಗರಕ್ಕೆ ಆಗಮಿಸಿದ್ದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಅಪರಾಧ ಎಸಗಿದವರು ಅದರ ಪರಿಣಾಮ ಎದುರಿಸಬೇಕಾಗುತ್ತದೆ. ''ತಪ್ಪು ಮಾಡುವವರ ವಿರುದ್ಧ ಸರಕಾರ ಕ್ರಮ ಕೈಗೊಳ್ಳಲಿದೆ. ರವಿ ಅವರು ಸಿಎಂ ಮತ್ತು ಸಚಿವರ ಮಕ್ಕಳ ಜತೆ ನಂಟು ಹೊಂದಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ನಡೆಯಲಿದೆ. ಸಮಗ್ರ ತನಿಖೆ ಬಳಿಕ ತಪ್ಪಿತಸ್ಥರನ್ನು ಸರಕಾರ ಶಿಕ್ಷಿಸಲಿದೆ ಎಂದು ಹೇಳಿದರು.
ಮಾಜಿ ಸಚಿವ, ಬಿಜೆಪಿ ಶಾಸಕ ಎಸ್ಎ ರಾಮದಾಸ್ ಅವರು ಮಾತನಾಡಿ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
“ಕಾನೂನು ಎಲ್ಲರಿಗೂ ಒಂದೇ. ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆ ನಡೆಯಲಿದೆ. ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳ ವಿರುದ್ಧ ಆರೋಪ ಮಾಡುವುದು ಸಾಮಾನ್ಯವಾಗಿದೆ ಎಂದರು.
ಜೆಡಿಎಸ್ ಎಂಎಲ್ಸಿ ಸಿ.ಎನ್.ಮಂಜೇಗೌಡ ಮಾತನಾಡಿ, ವರ್ಚಸ್ಸಿಗೆ ಹೆದರುತ್ತಿರುವ ರಾಜಕಾರಣಿಗಳನ್ನು ರವಿ ಬ್ಲ್ಯಾಕ್ ಮೇಲ್ ಮಾಡುವ ಯತ್ನ ಮಾಡುತ್ತಿದ್ದಾನೆಂದು ಹೇಳಿದ್ದಾರೆ.
'ಪ್ರಕರಣದಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹೆಸರು ಕೂಡ ಕೇಳಿಬಂದಿದೆ. ರಾಜಕಾರಣಿಗಳು ತಮ್ಮ ಘನತೆ ಮತ್ತು ಗೌರವದ ಬಗ್ಗೆ ಭಯಪಡುತ್ತಾರೆ, ವಿಶೇಷವಾಗಿ ಚುನಾವಣಾ ಸಮಯದಲ್ಲಿ, ಆರೋಪಿಯು ತನ್ನ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳದಂತೆ ತಡೆಯಲು ಅದನ್ನು ಅಸ್ತ್ರವಾಗಿ ಬಳಸಿಕೊಂಡಿದ್ದಾನೆಂದು ತಿಳಿಸಿದ್ದಾರೆ.