ಬಿಜೆಪಿ ಶಾಸಕರಿಂದ ಸದನದ ಬಾವಿಗಿಳಿದು ಪ್ರತಿಭಟನೆ 
ರಾಜ್ಯ

ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹ, ವಿಧಾನಸಭೆಯಲ್ಲಿ ಕೋಲಾಹಲ

ಸಚಿವರೊಬ್ಬರ ಒತ್ತಡದಿಂದ ವಿನಾಕಾರಣ ತನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ನಾಗಮಂಗಲ ಕೆಎಸ್ಆರ್ ಟಿಸಿ ಡಿಪೋ ಚಾಲಕ ಕಮ್ ಕಂಡಕ್ಟರ್ ಜಗದೀಶ್ ಅವರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ...

ಬೆಂಗಳೂರು: ಸಚಿವರೊಬ್ಬರ ಒತ್ತಡದಿಂದ ವಿನಾಕಾರಣ ತನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ನಾಗಮಂಗಲ ಕೆಎಸ್ಆರ್ ಟಿಸಿ ಡಿಪೋ ಚಾಲಕ ಕಮ್ ಕಂಡಕ್ಟರ್ ಜಗದೀಶ್ ಅವರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ  ಗುರುವಾರ ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿತು.

ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ ಜಗದೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆ ನಡೆದು ಒಂದು ದಿನ ಕಳೆದರೂ ಎಫ್ಐಆರ್ ದಾಖಲಿಸಿಲ್ಲ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರನ್ನು ಸರ್ಕಾರ ರಕ್ಷಿಸುತ್ತಿದೆ. ತಕ್ಷಣ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಉದ್ಯೋಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರೂ ಪೊಲೀಸರು ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿದರು.

ಸರ್ಕಾರಿ ಅಧಿಕಾರಿಗಳು ಸಂಕಷ್ಟದಲ್ಲಿದ್ದಾರೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಇದನ್ನೇ ಜನ ದಿನನಿತ್ಯ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಈ ಹಿಂದೆಗುತ್ತಿಗೆದಾರರೊಬ್ಬರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಾಗ ಬಿಜೆಪಿ ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದರು ಎಂದು ಮಾಜಿ ಸಿಎಂ ಹೇಳಿದರು.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ, ಸರ್ಕಾರ ಅಧಿಕಾರಕ್ಕೆ ಬಂದ 50 ದಿನಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ರಾಜ್ಯದ ಕೆಲವು ಭಾಗಗಳಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಕಾರಣಕ್ಕೆ ಒತ್ತಡ ಹಾಕಿ ವರ್ಗಾವಣೆ ಮಾಡಿರುವುದೇ ಜಗದೀಶ್ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂದು ಆರೋಪಿಸಿದರು.

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್‌ಆರ್‌ಟಿಸಿ ನೌಕರನ ಪತ್ನಿ ಪಂಚಾಯ್ತಿ ಸದಸ್ಯೆಯಾಗಿದ್ದು, ಅವರ ಮೇಲೆ ಅನಗತ್ಯ ಒತ್ತಡ ಹೇರಲಾಗಿದೆ ಎಂದು ಕುಮಾರಸ್ವಾಮಿ ದೂರಿದರು.

ಸಚಿವ ಚಲುವರಾಯಸ್ವಾಮಿ ವಿರುದ್ಧ ಸರಣಿ ಆರೋಪ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಶಾಸಕರಾದ ಪಿಎಂ ನರೇಂದ್ರಸ್ವಾಮಿ ಮತ್ತು ರಮೇಶ್ ಬಂಡಿಸಿದ್ದೇಗೌಡ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆಯಿತು.

ಕೆ.ಜೆ. ಜಾರ್ಜ್ ಮತ್ತು ಈಶ್ವರಪ್ಪ ಅವರು ಅಧಿಕಾರದಲ್ಲಿದ್ದಾಗ ಇದೇ ರೀತಿಯ ಘಟನೆಗಳು ನಡೆದಾಗ ರಾಜೀನಾಮೆ ನೀಡಿದ ಉದಾಹರಣೆಗಳನ್ನು ಉಲ್ಲೇಖಿಸಿ ಜೆಡಿಎಸ್ ನಾಯಕರೂ ಚಲುವರಾಯಸ್ವಾಮಿ ರಾಜೀನಾಮೆಗೆ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಇಂಧನ ಸಚಿವ ಕೆಜೆ ಜಾರ್ಜ್, ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದ ಕ್ಲೀನ್ ಚಿಟ್ ಸಿಕ್ಕಿದೆ. ಆದರೆ ಕುಮಾರಸ್ವಾಮಿ ಅವರು ಮಾನಹಾನಿ ಮಾಡಿದ್ದಕ್ಕೆ ಕ್ಷಮೆಯಾಚಿಸುವ ಸೌಜನ್ಯ ತೋರಲಿಲ್ಲ ಎಂದರು.

ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಇದು ಕಮಿಷನ್ ಸರ್ಕಾರ, ಕೊಲೆಗಡುಕ ಸರ್ಕಾರ ಎಂದು ಘೋಷಣೆ ಕೂಗಿದರು. ಗದ್ದಲ ಹೆಚ್ಚಾಗುತ್ತಿದ್ದಂತೆ ಸ್ಪೀಕರ್ ಯುಟಿ ಖಾದರ್ ಅವರು ಕಲಾಪವನ್ನು ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT