ರಾಜ್ಯ

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬರ ಪರಿಸ್ಥಿತಿ ಕುರಿತು ವಿಧಾನಸಭೆಯಲ್ಲಿ ಚರ್ಚೆ

Nagaraja AB

ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬರಗಾಲದ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ಶಾಸಕರು ಪಕ್ಷಾತೀತವಾಗಿ ಪ್ರಸ್ತಾಪಿಸಿದರು. ರಾಜ್ಯವನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಫಜಲಪುರ ಶಾಸಕ ಅಲ್ಲಮಪ್ರಭು ಪಾಟೀಲ್ (ಕಾಂಗ್ರೆಸ್) ಭೀಮಾ ನದಿ ಬತ್ತಿ ಹೋಗಿದೆ. ಸಾಮಾನ್ಯವಾಗಿ ಈ ಹೊತ್ತಿಗೆ 74 ಮಿಮೀ ಮಳೆಯಾಗುತಿತ್ತು. ಆದರೆ ಈ ವರ್ಷ ಕೇವಲ 24 ಮಿಮೀ ಮಳೆಯನ್ನು ಪಡೆದಿದ್ದೇವೆ. ಈ ವೇಳೆಗೆ ನಮ್ಮ ರೈತರು 8.87 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಪೂರ್ಣಗೊಳಿಸುತ್ತಿದ್ದರು. ಆದರೆ, ಈ ಬಾರಿ ಇದುವರೆಗೆ 25,000 ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆ ಮಾಡಿದ್ದು, ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಬರಪೀಡಿತ ತಾಲೂಕ್ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು. 

ಆಳಂದ ಶಾಸಕ ಬಿ.ಆರ್.ಪಾಟೀಲ , ಕುಡಿಯುವ ನೀರಿನ ತೀವ್ರ ಸಮಸ್ಯೆ ಇದೆ ಎಂದರು. ಕಡಿಮೆ ಮಳೆಯಿಂದ ರೈತರ ಜೀವನ ಅಂತ್ಯಗೊಳ್ಳುವ ಸಾಧ್ಯತೆಯಿದೆ" ಎಂದು ಯಾದಗಿರಿಯ ಜೆಡಿಎಸ್ ಶಾಸಕ ಶರಣಗೌಡ ಕಂಡ್ಕೂರ್ ಹೇಳಿದರು. ಮಾಜಿ ಸಿಎಂ ಮತ್ತು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ನೀರಿನ ತೀವ್ರ ಅಭಾವವಿದೆ.  ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಪ್ರತಿ ತಾಲೂಕಿಗೆ 50 ಲಕ್ಷ ರೂ.ಗಳನ್ನು ಘೋಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ''ರಾಜ್ಯದ ಹಲವೆಡೆ ಕಳೆದ 10 ದಿನಗಳಿಂದ ಉತ್ತಮ ಮಳೆಯಾಗಿದೆ. ಹವಾಮಾನ ತಜ್ಞರು ಕೂಡ ಮುಂದಿನ 10 ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ. ಇನ್ನೂ ಒಂದು ವಾರ ಕಾದು ಬರ ಪೀಡಿತ ತಾಲೂಕುಗಳ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು. ಪ್ರಸ್ತುತ 193 ಗ್ರಾಮಗಳಿಗೆ ಟ್ಯಾಂಕರ್ ನೀರು ಹಾಗೂ 339 ಗ್ರಾಮಗಳಿಗೆ ಬೋರ್‌ವೆಲ್‌ ಪೂರೈಕೆ ಮಾಡಲಾಗುತ್ತಿದೆ ಎಂದರು. ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಯೊಳಗೆ ನೀರು ಪೂರೈಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

SCROLL FOR NEXT