ರಾಜ್ಯ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ, ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್

Sumana Upadhyaya

ಬೆಂಗಳೂರು: ಬೆಳಗಾವಿ ಮೂಲದ ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರಿಗೆ ಭಾರೀ ಗೆಲುವು ಸಿಕ್ಕಿದೆಎನ್ನಬಹುದು. ಬೆಂಗಳೂರಿನ ಜನ ಪ್ರತಿನಿಧಿ ನ್ಯಾಯಾಲಯವು ಬಿ ರಿಪೋರ್ಟ್ ನ್ನು ಎತ್ತಿ ಹಿಡಿದಿದೆ.

ಇದರಿಂದ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಭಾರೀ ಗೆಲುವು ಸಿಕ್ಕಿದೆ ಎನ್ನಬಹುದು. ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ 2022ರ ಏಪ್ರಿಲ್ 12ರಂದು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿಗೆ ಮುಖ್ಯ ಕಾರಣ ಈಶ್ವರಪ್ಪನವರು ಎಂಬುದು ಆರೋಪವಾಗಿದೆ. 

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್, ರಾಜಕೀಯ ಪ್ರಭಾವಕ್ಕೆ ಒಳಗಾಗಿ ಎಸ್ಐಟಿ ಅಧಿಕಾರಿಗಳು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದರು. ಶನಿವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಬಿ-ರಿಪೋರ್ಟ್ ಅಂಗೀಕರಿಸಿದೆ.

ಬಿಜೆಪಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯರತ್ ರಾಜ್ ಇಲಾಖೆ ಸಚಿವರಾಗಿದ್ದ ವೇಳೆ ಈಶ್ವರಪ್ಪನವರು ಇಲಾಖೆಯ ಕಾಮಗಾರಿ ನಡೆಸಿದ ಸಂಬಂಧ ಸರ್ಕಾರದಿಂದ ಬಿಲ್ ಮಂಜೂರು ಮಾಡಲು ಶೇಕಡಾ 40ರಷ್ಟು ಕಮಿಷನ್ ಕೇಳಿದ್ದರು ಎಂದು ಮೃತ ಸಂತೋಷ್ ಪಾಟೀಲ್ ಆರೋಪಿಸಿದ್ದರು. ಆರೋಪ ಹಿನ್ನೆಲೆಯಲ್ಲಿ ಈಶ್ವರಪ್ಪನವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೂಡ ನೀಡಬೇಕಾಗಿ ಬಂತು.

ಇದನ್ನು ಪ್ರಮುಖ ಅಸ್ತ್ರವಾಗಿ ತೆಗೆದುಕೊಂಡು ಆಗ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ರಾಜ್ಯಾದ್ಯಂತ ಭಾರೀ ಪ್ರತಿಭಟನೆ ಮಾಡಿತ್ತು. ಈ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಮಿಷನ್ ಆರೋಪವನ್ನೇ ಪ್ರಮುಖ ಅಸ್ತ್ರವಾಗಿ ಮಾಡಿಕೊಂಡಿದ್ದು. ಇದು ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣವಾಯಿತು ಎನ್ನಬಹುದು.

SCROLL FOR NEXT