ರಾಜ್ಯ

10 ಮಂದಿ ಬಿಜೆಪಿ ಶಾಸಕರ ಅಮಾನತು: ಕಲಾಪ ಬಹಿಷ್ಕರಿಸಿ ಬಿಜೆಪಿ ಶಾಸಕರ ಪ್ರತಿಭಟನೆ, ರಾಜ್ಯಪಾಲರಿಗೆ ದೂರು

Sumana Upadhyaya

ಬೆಂಗಳೂರು: ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಸದನದಿಂದ ಅಮಾನತು ಮಾಡಿರುವುದು ಖಂಡಿಸಿ ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬಿಜೆಪಿ ಶಾಸಕರು ಧರಣಿ ನಡೆಸಿದರು. ಬಸವರಾಜ ಬೊಮ್ಮಾಯಿ‌ ಹಾಗೂ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಶಾಸಕರಾದ ಸುನೀಲ್​ ಕುಮಾರ್, ಆರಗ ಜ್ಞಾನೇಂದ್ರ, ಮುನಿರತ್ನ. ಸುರೇಶ್​ ಕುಮಾರ್​, ಭೈರತಿ ಬಸವರಾಜ್​ ಸೇರಿದಂತೆ ಹಲವರು ಭಾಗಿಯಾಗಿದ್ದರು. 

ನಂತರ ವಿಧಾನಸೌಧದಿಂದ ರಾಜಭವನದವರೆಗೂ ಪಾದಯಾತ್ರೆ ಮೂಲಕ ಹೋಗಿ ದೂರು ನೀಡಲು ನಿರ್ಧರಿಸಲಾಗಿದೆ. ಅಲ್ಲದೇ ಇಂದು, ನಾಳೆ ಉಭಯ​​​ ಕಲಾಪ ಬಹಿಷ್ಕರಿಸಲು ಬಿಜೆಪಿ ನಿರ್ಧಾರ ಮಾಡಿದೆ. ಈ ಬಗ್ಗೆ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಎಂಎಲ್​, ಎಂಎಲ್​ಸಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. 

ಸ್ಪೀಕರ್​ ಯುಟಿ ಖಾದರ್ ನಡೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಬಿಜೆಪಿ ಚಿಂತನೆ ನಡೆಸಿದೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಆರ್.ಅಶೋಕ್, ಸ್ಪೀಕರ್ ಪೀಠಕ್ಕೆ ಯು.ಟಿ.ಖಾದರ್​ ಅಗೌರವ ತೋರಿದ್ದಾರೆ. ಸ್ಪೀಕರ್ ಆದವರು ಒಂದು ಪಾರ್ಟಿ ಪರವಾಗಿ ಇರಬಾರದು. ಸೋನಿಯಾ, ರಾಹುಲ್​ರನ್ನು ಸ್ಪೀಕರ್ ಭೇಟಿಯಾಗಿದ್ದಾರೆ. ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಿ ನ್ಯಾಯ ಕೇಳಿದ್ದೆವು. ಪ್ರಶ್ನೆ ಮಾಡಿದ್ದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ಸ್ಪೀಕರ್ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು.

ಇನ್ನು ಸ್ಪೀಕರ್ ಯುಟಿ​ ಖಾದರ್ ಅವರು ಇಂದು ರಾಜ್ಯಪಾಲ ಗೆಹ್ಲೋಟ್​ ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ತಪ್ಪು ಮಾಡಿದ್ದಾರೆ, ಅದಕ್ಕೆ ಗವರ್ನರ್ ಅವರನ್ನು ಭೇಟಿಯಾಗಿದ್ದಾರೆ. ಸ್ಪೀಕರ್​​ ಸರಿಯಾಗಿ ಇದ್ದಿದ್ರೆ ಯಾಕೆ ಗವರ್ನರ್​ ಭೇಟಿ ಆಗಬೇಕಿತ್ತು ಎಂದು ಪ್ರಶ್ನಿಸಿದರು.

ರಾಜ್ಯದ ಹಿರಿಯ ಐ.ಎ.ಎಸ್. ಅಧಿಕಾರಿಗಳನ್ನು ತಮ್ಮ ಮನೆಯಾಳುಗಳನ್ನಾಗಿ ನಡೆಸಿಕೊಂಡಿರುವ ಕಾಂಗ್ರೆಸ್, ಅದನ್ನು ಪ್ರಶ್ನಿಸಿದ್ದಕ್ಕೆ ತನ್ನ ದಮನಕಾರಿ ಹಾಗೂ ಸೇಡಿನ ರಾಜಕೀಯವನ್ನು ಸ್ಪೀಕರ್ ಮೂಲಕ ಮಾಡಿಸುತ್ತಿದೆ. ಕಾಂಗ್ರೆ‌ಸ್‌ನ ಈ ಸಂವಿಧಾನ ವಿರೋಧಿ ನಿಲುವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

SCROLL FOR NEXT