ರಾಜ್ಯ

ಕಬಿನಿ ಜಲಾಶಯ ಬಹುತೇಕ ಭರ್ತಿ; ಕೆಆರ್‌ಎಸ್‌ ಒಳಹರಿವಿನಲ್ಲಿ ಹೆಚ್ಚಳ

Manjula VN

ಮೈಸೂರು: ಕೇರಳದ ವಯನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಜಲಾಶಯದ ಮಟ್ಟ 2,281.27 ಅಡಿಗಳಿಗೆ ಏರಿಕೆಯಾಗಿದೆ.

ಒಳಹರಿವು 25,685 ಕ್ಯೂಸೆಕ್‌ಗೆ ಏರಿಕೆಯಾಗಿದ್ದು, ಕರ್ನಾಟಕ-ಕೇರಳ ಗಡಿಯಲ್ಲಿರುವ ಬಾಲಾವಿ ಗೇಜಿಂಗ್ ಸ್ಟೇಷನ್‌ನಲ್ಲಿ ಒಳಹರಿವಿನ ಪ್ರಮಾಣವನ್ನು 20,000 ಕ್ಯೂಸೆಕ್‌ಗೆ ಏರಿಕೆಯಾಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಬೆಳವಣಿಗೆ ತಮಿಳುನಾಡು ರಾಜ್ಯಕ್ಕೆ ಕೊಂಚ ನಿರಾಳವನ್ನು ನೀಡಿದಂತಾಗಿದೆ.

ಜೂನ್ ಮತ್ತು ಜುಲೈ ತಿಂಗಳಿಗೆ ತನ್ನ ಪಾಲಿನ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಆದೇಶ ನೀಡುವಂತೆ ತಮಿಳುನಾಡು ಸರ್ಕಾರ ಈ ಹಿಂದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಪತ್ರ ಬರೆದಿತ್ತು.

ರಾಜ್ಯದಲ್ಲಿ ಅಲ್ಪ ಪ್ರಮಾಣದ ಮಳೆಯಾಗಿರುವುದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿತ್ತು. ಆದರೆ ಕಬಿನಿ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇದೀಗ ನೀರು ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಡಿಬಿ ಕುಪ್ಪೆ ಮತ್ತು ಕೇರಳದ ಗಡಿ ಭಾಗದ ಗ್ರಾಮಗಳ ನಡುವೆ ಬೋಟಿಂಗ್ ಸೌಲಭ್ಯವನ್ನು ಬಂದ್ ಮಾಡಲಾಗಿದೆ.

ಬೀಚನಹಳ್ಳಿಯ ಬಿದರಹಳ್ಳಿ ಸೇತುವೆಯೂ ಜಲಾವೃತಗೊಂಡಿದ್ದು. ಜನಜೀವನ ಅಸ್ತವ್ಯಸ್ತಗೊಂಡಿದೆ. ಯಾವಾಗ ಬೇಕಾದರೂ ಹೊರ ಹರಿವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ರಾಜ್ಯದ ಗಡಿ ಭಾಗದಲ್ಲಿರುವ ಅರಣ್ಯದ ಅಂಚಿನಲ್ಲಿರುವ ಎಚ್‌ಡಿ ಕೋಟೆ ಮತ್ತು ಸರಗೂರು ತಾಲೂಕಿನ ಹಳ್ಳಿಗಳಲ್ಲಿಯೂ ಕೂಡ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಏತನ್ಮಧ್ಯೆ, ಕೊಡಗು ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 103 ಅಡಿಗಳಿಗೆ ಏರಿಕೆಯಾಗಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆ ಮುಂದುವರಿದರೆ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ನಡುವೆ ನೀರಾವರಿ ಇಲಾಖೆ ಅಧಿಕಾರಿಗಳು ಹಾರಂಗಿ ಜಲಾಶಯದಿಂದ 20,000 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಿದ್ದಾರೆ.

SCROLL FOR NEXT