ಮಂಗಳೂರು: ಕರ್ನಾಟಕದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಸೋಮೇಶ್ವರ ಬೀಚ್ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕರಾವಳಿ ನಗರ ಮಂಗಳೂರಿನ ಸೋಮೇಶ್ವರ ಬೀಚ್ನಲ್ಲಿ (Someshwar Beach) ನೈತಿಕ ಪೊಲೀಸ್ ಗಿರಿ (Moral Policing) ನಡೆದಿದ್ದು, ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೂವರು ಹಿಂದೂ ವಿದ್ಯಾರ್ಥಿನಿಯರು, ಮೂವರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದಿದೆ. ಮೂಲಗಳ ಪ್ರಕಾರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದರು. ಇದೇ ವೇಳೆ ತಂಡವೊಂದು ಹಲ್ಲೆ ನಡೆಸಿದೆ ಎನ್ನಲಾಗಿದೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ: ಚಾಟ್ಸ್ ತಿನ್ನುತ್ತಿದ್ದವರ ಮೇಲೆ ಹಲ್ಲೆಗೆ ಯತ್ನ; ಯುವತಿಯಿಂದ ದೂರು ದಾಖಲು
ಕೇರಳದ ಕಣ್ಣೂರಿನ ಯುವಕರು ಹಾಗೂ ಕಾಸರಗೋಡಿನ ಯುವತಿಯರು ಸೋಮೇಶ್ವರ ಬೀಚ್ಗೆ ವಿಹಾರಕ್ಕೆ ಬಂದಿದ್ದರು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದಕ್ಕೆ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ತೆರಳಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಉಳ್ಳಾಲ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 3ನೇ ಘಟನೆ
ಇನ್ನು ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ನೈತಿಕ ಪೊಲೀಸ್ ಗಿರಿಯ 3ನೇ ಘಟನೆ ವರದಿಯಾಗಿದೆ.
ಇದನ್ನೂ ಓದಿ: 'ಸಮಾಜದಲ್ಲಿ ಶಾಂತಿ ಕದಡಲು ಒಮ್ಮೆ ಪ್ರಯತ್ನಿಸಿ ನೋಡಿ...': ಬಿಜೆಪಿಗರಿಗೆ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ
ಈ ಹಿಂದೆ ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಆ ನಂತರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಕೂಡ ನೈತಿಕ ಪೊಲೀಸ್ ಗಿರಿ ನಡೆದಿತ್ತು.