ಬೆಂಗಳೂರು: ಬೆಂಗಳೂರು ನಗರ ಮಾಜಿ ಮೇಯರ್ಗಳು ಹಾಗೂ ಕಾಂಗ್ರೆಸ್ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿದ್ದು, ಪಾಲಿಕೆಗೆ ಶೀಘ್ರಗತಿಯಲ್ಲಿ ಚುನಾವಣೆ ನಡೆಸುವಂತೆ ಮನವಿ ಮಾಡಿಕೊಂಡರು. ಇದೇ ವೇಳೆ ಅವೈಜ್ಞಾನಿಕ ವಾರ್ಡ್ ವಿಂಗಡಣೆ ಕುರಿತಂತೆಯೂ ಕಳವಳ ವ್ಯಕ್ತಪಡಿಸಿದರು.
ನಾಯಕರ ಈ ಮನವಿಗೆ ಸ್ಪಂದನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶೀಘ್ರಗತಿಯಲ್ಲಿ ಚುನಾವಣೆ ನಡೆಸುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.
ಸುಪ್ರೀಂಕೋರ್ಟ್ ತೀರ್ಪಿಗಾಗಿ ಕಾಯಲಾಗುತ್ತಿದ್ದು, ಡಿಲಿಮಿನೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
2020ರ ಸೆಪ್ಟೆಂಬರ್ ನಿಂದಲೂ ಬಿಬಿಎಂಪಿಯಲ್ಲಿ ಯಾವುದೇ ರೀತಿಯ ಚುನಾವಣೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗಿದೆ ಎಂದು ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಅವರು ಹೇಳಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದ ಅವೈಜ್ಞಾನಿಕ ವಾರ್ಡ್ ವಿಂಗಡಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಬಳಿ ಕಳವಳವನ್ನು ವ್ಯಕ್ತಪಡಿಸಿದ್ದೇವೆ. ಅಡ್ವೊಕೇಟ್ ಜನರಲ್ ಜೊತೆ ಮಾತನಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆಂದು ತಿಳಿಸಿದರು.
ಮಾಜಿ ಮೇಯರ್ ಸಂಪತ್ ರಾಜ್ ಮಾತನಾಡಿ, ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಬಿಬಿಎಂಪಿಗೆ ಚುನಾವಣೆ ನಡೆಸುವುದಾಗಿ ಘೋಷಿಸಿತ್ತು. "ಸಿಎಂ ನಮ್ಮ ಅಭಿಪ್ರಾಯವನ್ನು ಸ್ವೀಕರಿಸಿದ್ದಾರೆ. ಯಾವುದೇ ನಿರ್ಧಾರವನ್ನು ಪ್ರಕಟಿಸುವ ಮೊದಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೆಂಗಳೂರಿನ ಎಲ್ಲಾ ಪಕ್ಷದ ಶಾಸಕರೊಂದಿಗೆ ಚರ್ಚಿಸುತ್ತೇನೆ" ಎಂದು ಹೇಳಿದ್ದಾರೆಂದು ಹೇಳಿದರು.
ಬಿಬಿಎಂಪಿಯ ಮಾಜಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಮಾತನಾಡಿ, ಬೆಂಗಳೂರು ಮಹಾನಗರ ಪಾಲಿಕೆಯ ಸುಮಾರು 50 ಮಾಜಿ ಸದಸ್ಯರು ಆದಷ್ಟು ಬೇಗ ಚುನಾವಣೆಯನ್ನು ಘೋಷಿಸುವಂತೆ ಸಿಎಂಗೆ ಒತ್ತಾಯಿಸಿದ್ದಾರೆಂದು ತಿಳಿಸಿದರು.
ಪಕ್ಷ ಅಧಿಕಾರಕ್ಕೆ ಬಂದಿರುವುದರಿಂದ ಬಿಬಿಎಂಪಿ ಚುನಾವಣೆ ನಡೆಸಲು ಇದು ಸೂಕ್ತ ಸಮಯವಾಗಿದೆ. ಚುನಾವಣೆ ನಡೆಸಿದ್ದೇ ಆದರೆ, ಕಾಂಗ್ರೆಸ್ಗೆ ಅನುಕೂಲವಾಗಲಿದೆ ಎಂದು ಸಿಎಂಗೆ ಹೇಳಿದ್ದೇವೆ.
ಬಿಬಿಎಂಪಿ ಚುನಾವಣೆ ಕುರಿತ ನ್ಯಾಯಾಲಯದ ತೀರ್ಪು ಮತ್ತು ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ವಾರ್ಡ್ ವಿಂಗಡಣೆಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆಂದು ವಾಜಿದ್ ತಿಳಿಸಿದರು.