ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಸಚಿವ ದಿನೇಶ್ ಗುಂಡೂರಾವ್ ಅವರು ಜೂನ್ 11 ರ ಭಾನುವಾರದಂದು ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದಾರೆ.
ತಮ್ಮ ಭೇಟಿಯ ವೇಳೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಜವಾಬ್ದಾರಿಯನ್ನು ನಿಭಾಯಿಸುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ ಎಂದರು.
'ನಾನು ಯುವ ಕಾಂಗ್ರೆಸ್ನಲ್ಲಿದ್ದ ದಿನಗಳಿಂದ ಈ ಜಿಲ್ಲೆಯೊಂದಿಗೆ ದೀರ್ಘಕಾಲದ ಒಡನಾಟ ಹೊಂದಿದ್ದೇನೆ. ಇಲ್ಲಿನ ಜನರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ನಾನು ಬದ್ಧನಾಗಿದ್ದೇನೆ. ಈ ಜಿಲ್ಲೆಯವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಬೇಕಿತ್ತು. ಆದರೆ, ಯು.ಟಿ. ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದರಿಂದ ಈ ಪಾತ್ರ ನನಗೆ ಒಲಿದಿದೆ' ಎಂದು ಹೇಳಿದರು.
'ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಪ್ರಾಥಮಿಕ ಗುರಿಯಾಗಿದೆ. ಎಲ್ಲಾ ಅಧಿಕಾರಿಗಳು ಹಿಂಜರಿಕೆಯಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕೆಂದು ನಾನು ನಿರೀಕ್ಷಿಸುತ್ತೇನೆ. ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ನಿಷ್ಪಕ್ಷಪಾತವಾಗಿ ಕೆಲಸ ಮಾಡುವುದು ಬಹುಮುಖ್ಯ' ಎಂದು ಹೇಳಿದರು.
'ಜಿಲ್ಲೆಯ ಅಭಿವೃದ್ಧಿಗೆ ಎಲ್ಲರ ಸಾಮೂಹಿಕ ಪ್ರಯತ್ನ ಅಗತ್ಯವಿದೆ. ವಿಶಿಷ್ಟವಾಗಿ ಮಳೆಗಾಲದಲ್ಲಿ ಅಭಿವೃದ್ಧಿ ಕಾರ್ಯಗಳು ಸವಾಲಾಗಿದ್ದರೂ, ಯಾವುದೇ ಅಡೆತಡೆಗಳನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿರಬೇಕು. ಈ ಉದ್ದೇಶಕ್ಕಾಗಿ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಸರ್ಕಾರವು ಸಂಪೂರ್ಣ ಬದ್ಧವಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಉಸ್ತುವಾರಿ ಸಚಿವರ ನೇಮಕ: ಆಯಕಟ್ಟಿನ ಜಿಲ್ಲೆಗಳಲ್ಲಿ ಸಿದ್ದು ಆಪ್ತರಿಗೆ ಮಣೆ; ಡಿಕೆಶಿಗೆ ಬಿಜೆಪಿ ಭದ್ರಕೋಟೆ ಭೇದಿಸುವ ಹೊಣೆ!
ಮುಂದಿನ ವಾರ ಜಿಲ್ಲೆಗೆ ಭೇಟಿ ನೀಡಿ ಎಲ್ಲ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ ಪ್ರಗತಿ ಪರಿಶೀಲನಾ ಸಭೆ ನಡೆಸುವ ಯೋಜನೆಯನ್ನು ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಕಟಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳ ಪ್ರಾಬಲ್ಯದ ಸಮಸ್ಯೆಯ ಕುರಿತು ಮಾತನಾಡಿದ ಅವರು, ಮಹಿಳೆಯರಿಗೆ ಉಚಿತ ಪ್ರಯಾಣದ ಘೋಷಿತ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಅವರು, ಇಂತಹ ಉಪಕ್ರಮಗಳು ಸರ್ಕಾರಿ ಬಸ್ಗಳಿಗೆ ಸೀಮಿತವಾಗಿದ್ದು, ಖಾಸಗಿ ವಲಯಕ್ಕೂ ವಿಸ್ತರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.