ರಾಜ್ಯ

ಮತಾಂತರ ನಿಷೇಧ ಕಾಯ್ದೆ ವಾಪಸ್: ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ವಿಹೆಚ್ ಪಿ ಪ್ರತಿಭಟನೆ

Nagaraja AB

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಶಾಂತಿಯುತ ಪ್ರತಿಭಟನೆಯಲ್ಲಿ ಬಜರಂಗ ದಳ ಸೇರಿದಂತೆ ಅನೇಕ ಹಿಂದೂ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಬಾರದು ಎಂದು ಆಗ್ರಹಿಸಿದರು.

ಭಾರತ ಹಿಂದೂ ರಾಷ್ಟ್ರವಾಗಿದ್ದು, ವಿವಿಧ ಧರ್ಮಗಳ ಜನರು ಶಾಂತಿಯುತವಾಗಿ ಸಹಬಾಳ್ವೆ ನಡೆಸಲು ಸಂವಿಧಾನ ಅವಕಾಶ ನೀಡಿದೆ. ಇತರೆ ಧರ್ಮದ ಜನರು ತಮ್ಮ ಧರ್ಮ ಮತ್ತು ಪದ್ಧತಿಗಳನ್ನು ಆಚರಿಸಬಹುದು, ಅದನ್ನು ಒಪ್ಪುತ್ತೇವೆ ಆದರೆ, ಹಿಂದೂಗಳ ಬಲವಂತದ ಮತಾಂತರವನ್ನು ಖಂಡಿಸುತ್ತೇವೆ ಎಂದು ವಿಎಚ್‌ಪಿ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್ ಹೇಳಿದ್ದಾರೆ.

"ಕಾಂಗ್ರೆಸ್ ಸರ್ಕಾರ ಹಿಂದೂಗಳ ಜೊತೆಗೆ ಇತರ ಧರ್ಮದವರಿಂದ ಅಧಿಕಾರಕ್ಕೆ ಬಂದಿದೆ, ಅಲ್ಪಸಂಖ್ಯಾತರ ಮತಗಳಿಂದ ಅಧಿಕಾರಕ್ಕೆ ಬಂದಿಲ್ಲ, ಕಾಂಗ್ರೆಸ್ ಈ ನಡೆ ಸಮಸ್ತ ಹಿಂದೂಗಳಿಗೆ ದ್ರೋಹವಾಗಿದೆ. ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕೆಂದು ಕರ್ನಾಟಕದ ಹಿಂದೂಗಳು ಒತ್ತಾಯಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ಬಿಜೆಪಿ ಅವಧಿಯಲ್ಲಿನ ಕೆಲ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು.

SCROLL FOR NEXT