ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಮತ್ತು ಅಕ್ರಮಗಳನ್ನು ಸರಿಪಡಿಸಲು ಮತ್ತು ರೋಗಿಗಳ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ, ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಆಡಳಿತ ಅಧಿಕಾರಿಗಳನ್ನು ನೇಮಿಸಲು ಚಿಂತನೆ ನಡೆಸುತ್ತಿದೆ.
3-5 ವರ್ಷಗಳ ಅವಧಿಗೆ ವಿಶೇಷ ಅಧಿಕಾರಿಯನ್ನು ನೇಮಕ ಮಾಡುವ ನಿರೀಕ್ಷೆಯಿದೆ. ಆಸ್ಪತ್ರೆಯ ನಿರ್ವಹಣೆಯನ್ನು ಸುಗಮಗೊಳಿಸುವ ಮತ್ತು ಆಸ್ಪತ್ರೆಯ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ಜವಾಬ್ದಾರಿಯನ್ನು ಈ ಅಧಿಕಾರಿ ಹೊಂದಿರುತ್ತಾರೆ.
ವಿಶೇಷ ಆಡಳಿತಾಧಿಕಾರಿಗಳು ಆಸ್ಪತ್ರೆಯ ಆಡಳಿತದ ಉಸ್ತುವಾರಿಯಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಮಿಷನರೇಟ್ ಮತ್ತು ರಾಜ್ಯ ಸರ್ಕಾರದ ನಡುವೆ ಒಂದು ಹಂತದ ನೇರ ಸಂಪರ್ಕದಲ್ಲಿರುತ್ತಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ: ಕೆಸಿ ಜನರಲ್ ಆಸ್ಪತ್ರೆಯಲ್ಲಿ ಲೋಪದೋಷಗಳು ಪತ್ತೆ: ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ಗುಂಡುರಾವ್ ಸೂಚನೆ
ಸರ್ಕಾರ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದ್ದರೂ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಒಂದಲ್ಲಾ ಒಂದು ಸಮಸ್ಯೆ ಇದ್ದೇ ಇರುತ್ತವೆ. ಬೆಂಗಳೂರಿನ ಕೆಲವು ಆಸ್ಪತ್ರೆಗಳು ಮತ್ತು ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮೂಲಭೂತ ಸೌಲಭ್ಯಗಳು, ನಿರ್ಣಾಯಕ ವೈದ್ಯಕೀಯ ಸಾಧನಗಳು, ಔಷಧ ಮತ್ತು ಸಿಬ್ಬಂದಿಗಳ ಕೊರತೆಯಿದೆ. ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರಿ ಆಸ್ಪತ್ರೆಗಳಲ್ಲಿ ದಕ್ಷ ವ್ಯವಸ್ಥೆಯನ್ನು ಜಾರಿಗೆ ತರಲು ಪರಿಸ್ಥಿತಿಯ ಅವಲೋಕನ ಮತ್ತು ದೋಷನಿವಾರಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ವಿಶೇಷ ಅಧಿಕಾರಿಗಳನ್ನು ನೇಮಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.