ರಾಜ್ಯ

ಘನತ್ಯಾಜ್ಯ ನಿರ್ವಹಣೆ: ಉನ್ನತಾಧಿಕಾರಿಗಳೊಂದಿಗೆ ಸಭೆ, ವಿವರ ಪಡೆದ ಡಿಸಿಎಂ ಡಿಕೆ.ಶಿವಕುಮಾರ್

Manjula VN

ಬೆಂಗಳೂರು: ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆಯ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿ, ಘನತ್ಯಾಜ್ಯ ನಿರ್ವಹಣೆಯ ಕುರಿತು ಮಾಹಿತಿ ಪಡೆದುಕೊಂಡರು.

ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ ಸಂಸ್ಥೆಯ ಕಚೇರಿಯಲ್ಲಿ ಮೂರು ಗಂಟೆಗಳ ಸುದೀರ್ಘ ಸಭೆ ನಡೆಸಿ ಉಪಮುಖ್ಯಮಂತ್ರಿಗಳು ಮಾಹಿತಿ ಪಡೆದರು.

ಕಸ ಗುಡಿಸುವುದು, ಸಂಗ್ರಹಿಸುವುದು ಮತ್ತು ಸಾಗಿಸುವುದು, ವೆಚ್ಚದ ವಿವರಗಳು ಮತ್ತು ಇತರ ವಿವರಗಳನ್ನು ಸಚಿವರು ಮಾಹಿತಿ ಪಡೆದುಕೊಂಡರು. ಅಲ್ಲದೆ, ಘನತ್ಯಾಜ್ಯ ನಿರ್ವಹಣೆಗೆ 89 ಪ್ಯಾಕೇಜ್‌ಗಳ ಟೆಂಡರ್ ಪ್ರಕ್ರಿಯೆಯ ಬಗ್ಗೆಯೂ ಚರ್ಚೆ ನಡೆಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೂಲದಲ್ಲಿಯೇ ತ್ಯಾಜ್ಯವನ್ನು ಪ್ರತ್ಯೇಕಿಸುವ ವಿವರಗಳನ್ನೂ ಕೇಳಿದರು. ಕೆಲವು ಟೆಂಡರ್‌ಗಳಲ್ಲಿರುವ ಷರತ್ತುಗಳ ಬಗ್ಗೆ ವಿವರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು ಎಂದು ಹೇಳಿದ್ದಾರೆ.

ಅಲ್ಲದೆ, ಇಂದೋರ್, ತಮಿಳುನಾಡು ಅಥವಾ ಸಿಂಗಾಪುರದಂತಹ ಸ್ಥಳಗಳಿಗೆ ಭೇಟಿ ನೀಡಿ, ಕಸ ನಿರ್ವಹಣೆಯಲ್ಲಿ ಅಳವಡಿಸಿಕೊಂಡಿರುವ ಉತ್ತಮ ತಂತ್ರಗಳನ್ನು ಅಧ್ಯಯನ ಮಾಡುವಂತೆ ಹಾಗೂ ಅದು ಕೆಲಸ ಮಾಡಿದರೆ ಬೆಂಗಳೂರಿನಲ್ಲಿ ಜಾರಿಗೆ ತಲುವಂತೆ ಸೂಚಿಸಿದರು.

ನಗರದಲ್ಲಿ ಆರು ತ್ಯಾಜ್ಯ ಸಂಸ್ಕರಣಾ ಘಟಕಗಳ ಪೈಕಿ ಮೂರು ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬುದನ್ನು ಗಮನಿಸಿದ ಸಚಿವರು, ಈ ಕುರಿತು ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು ಎಂದು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಘನತ್ಯಾಜ್ಯ ನಿರ್ವಹಣೆಯ ಬಿಬಿಎಂಪಿ ವಿಶೇಷ ಆಯುಕ್ತ ಹರೀಶ್ ಕುಮಾರ್, ಎಸ್'ಡಬ್ಲ್ಯೂಡಿ ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ, ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ. ಮುಖ್ಯ ಇಂಜಿನಿಯರ್ ಪ್ರವೀಣ್ ಲಿಂಗಯ್ಯ ಉಪಸ್ಥಿತರಿದ್ದರು.

SCROLL FOR NEXT