ರಾಜ್ಯ

ರಾಯಚೂರಿನಲ್ಲಿ ಜವಳಿ ಪಾರ್ಕ್‌ ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ; ಉದ್ಯೋಗ ಸೃಷ್ಟಿಸುವ ನಿರೀಕ್ಷೆ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ

Manjula VN

ರಾಯಚೂರು: ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಯಚೂರು ಜಿಲ್ಲೆಗೆ ಜವಳಿ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅವರು ಸೋಮವಾರ ಹೇಳಿದರು.

ಸ್ಥಳೀಯ ಮಹತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಸಚಿವರು  ಮಾತನಾಡಿದರು.

ರಾಯಚೂರು ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಯಾದರೆ 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗಗಳು ಸೃಷ್ಟಿಯಾಗಲಿವ. ರಾಯಚೂರು ನಗರ ಪಾಲಿಕೆಯನ್ನು ರಾಯಚೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಈಗಾಗಲೇ ನಿರ್ಧರಿಸಿದ್ದು, ಜಲಧಾರ ಮತ್ತು ಜಲ ಜೀವನ್ ಮಿಷನ್ ಮೂಲಕ ಸುರಕ್ಷಿತ ಮತ್ತು ಶುದ್ಧ ಕುಡಿಯುವ ನೀರು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ರಾಯಚೂರು ಜನತೆಯ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದ್ದು, ಏಮ್ಸ್‌ಗಾಗಿ ರಾಯಚೂರಿನ ಜನತೆ ಹಾಗೂ ಸಂಘಟನೆಗಳು ನಡೆಸುತ್ತಿರುವ ಹೋರಾಟ ಮುಂದಿನ ದಿನಗಳಲ್ಲಿ ಸಾರ್ಥಕ ಫಲ ನೀಡಲಿದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ ನಾರಾಯಣಸ್ವಾಮಿ ಅವರು, ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಆವರು ಮಾತನಾಡಿದರು.

ಇದೇ ಸಂದರ್ಭದಲ್ಲಿ 155 ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸೌಲಭ್ಯಗಳ ಪ್ರಮಾಣ ಪತ್ರವನ್ನು  ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯ್ಕ, ಶಾಸಕ ಡಾ.ಎಸ್.ಶಿವರಾಜ ಪಾಟೀಲ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

SCROLL FOR NEXT