ರಾಜ್ಯ

ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ: ವಿವಿ ಕುಲಪತಿಗಳಿಗೆ ರಾಜ್ಯಪಾಲರ ಸಲಹೆ

Manjula VN

ಬೆಂಗಳೂರು: ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್ ಅವರು ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಮಂಗಳವಾರ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮ್ಮೇಳನ-2021ರ ಅಧ್ಯಕ್ಷತೆ ವಹಿಸಿ ರಾಜ್ಯಪಾಲರು ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಪರಿಣಾಮಕಾರಿಯಾಗಿ ಜಾರಿಗೆ ತರಲು ಮಾತೃಭಾಷೆಯಲ್ಲಿ ಶಿಕ್ಷಣ ನೀಡಲು ಪ್ರಯತ್ನಿಸಬೇಕು, ಜೊತೆಗೆ ಪಠ್ಯಪುಸ್ತಕಗಳನ್ನು ಸ್ಥಳೀಯ ಭಾಷೆಯಲ್ಲಿ ಸಿದ್ಧಪಡಿಸಬೇಕು ಎಂದು ಹೇಳಿದರು.

ಉನ್ನತ ಶಿಕ್ಷಣದಲ್ಲಿ ವಿಶೇಷವಾಗಿ ವಿಜ್ಞಾನ, ವಾಣಿಜ್ಯ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ಅನೇಕ ಕೋರ್ಸ್‌ಗಳನ್ನು ಇಂಗ್ಲಿಷ್ ಮಾಧ್ಯಮದ ಮೂಲಕ ಕಲಿಸಲಾಗುತ್ತದೆ, ಈ ಕೋರ್ಸ್‌ಗಳ ಪಠ್ಯಪುಸ್ತಕಗಳು ಮತ್ತು ಅಧ್ಯಯನ ಸಾಮಗ್ರಿಗಳು ಸ್ಥಳೀಯ ಭಾಷೆಗಳಲ್ಲಿ ಲಭ್ಯವಿರುವುದಿಲ್ಲ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಮೃತ ಕಾಲದ ಸಮಯದಲ್ಲಿ, ಭಾರತದ ಯಾವುದೇ ವಿದ್ಯಾರ್ಥಿಗಳು ತಮ್ಮ ಮಾತೃಭಾಷೆಯಲ್ಲಿ ಪಠ್ಯ ಪುಸ್ತಕಗಳಿಂದ ವಂಚಿತರಾಗಬಾರದು ಎಂದು ನಾನು ಭಾವಿಸುತ್ತೇನೆ. ತಮ್ಮ ಮಾತೃ ಭಾಷೆ/ಸ್ಥಳೀಯ ಭಾಷೆಯಲ್ಲಿ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಮುಂದಿನ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೊಂಡಿದೆ. ಕರ್ನಾಟಕದಲ್ಲಿ ಈ ಕಾರ್ಯವನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಮತ್ತು ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅಧಿಕಾರಿಗಳು ಮತ್ತು ರಾಜ್ಯ ವಿಶ್ವವಿದ್ಯಾಲಯಗಳ ಎಲ್ಲಾ ಉಪಕುಲಪತಿಗಳು ಉನ್ನತ ಶಿಕ್ಷಣಕ್ಕಾಗಿ ಪಠ್ಯಪುಸ್ತಕಗಳನ್ನು ಬರೆಯಲು/ಭಾಷಾಂತರಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ತಿಳಿಸಲಾಗಿದೆ. ಮನಸ್ಸಿಟ್ಟು ಮಾಡಿದರೆ ಯಾವುದೇ ಕಾರ್ಯ ಯಶಸ್ವಿಯಾಗಲಿದೆ ಎಂದರು.

SCROLL FOR NEXT