ಬೆಂಗಳೂರು: ಗಡಿ ವಿಚಾರದಲ್ಲಿ ಕನ್ನಡಿಗರ ಹಿತರಕ್ಷಿಸುವಲ್ಲಿ ವಿಫಲವಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಗಡಿ ಗ್ರಾಮಗಳಲ್ಲಿ ಆರೋಗ್ಯ ಯೋಜನೆ ಜಾರಿಗೊಳಿಸುವುದಾಗಿ ಹೇಳಿಕೆ ನೀಡಿದರೂ ಸಿಎಂ ಬಸವರಾಜ ಬೊಮ್ಮಾಯಿ ಮೌನ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: ಕರ್ನಾಟಕದ ಗಡಿ ಗ್ರಾಮಗಳಲ್ಲಿನ ಆರೋಗ್ಯ ಯೋಜನೆ ಆದೇಶ ಕೂಡಲೇ ಹಿಂಪಡೆಯಿರಿ: ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ
ಕರ್ನಾಟಕದ ಆಡಳಿತದಲ್ಲಿ ಮಹಾರಾಷ್ಟ್ರ ಸರ್ಕಾರ ಅನವಶ್ಯಕವಾಗಿ ಮಧ್ಯಪ್ರವೇಶಿಸುತ್ತಿದೆ. ಆದ್ದರಿಂದ ಗಡಿಯಲ್ಲಿನ 865 ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಅನುಷ್ಟಾನ ಸ್ಥಗಿತಕ್ಕೆ ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಮತ್ತು ಮಹಾರಾಷ್ಟ್ರ ಸರ್ಕಾರ ವನ್ನು ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.