ರಾಜ್ಯ

ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಮುಂದಿನ 5 ದಿನಗಳಲ್ಲಿ 2 ಬಾರಿ ರಾಜ್ಯಕ್ಕೆ ಅಮಿತ್ ಶಾ ಭೇಟಿ

Manjula VN

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಾಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿಯ ಚುನಾವಣಾ ಪ್ರಚಾರ ವೇಗ ಪಡೆದುಕೊಳ್ಳುತ್ತಿದೆ.

ಮುಂದಿನ ಐದು ದಿನಗಳಲ್ಲಿ ಅಮಿತ್ ಶಾ ಅವರು ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಲಿದ್ದಾರೆ. ಮಾರ್ಚ್ 24 ಮತ್ತು 26 ರಂದು ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಮೊದಲ ಭೇಟಿ ಸಂದರ್ಭದಲ್ಲಿ ಶಾ ಅವರು ಮೂರು ಪ್ರತಿಮೆಗಳನ್ನು ಅನಾವರಣಗೊಳಿಸಲಿದ್ದಾರೆ.

ಬೆಂಗಳೂರಿನ ಸಂಸ್ಥಾಪಕ ಕೆಂಪೇಗೌಡ ಮತ್ತು ಲಿಂಗಾಯತ ಸಮಾಜ ಸುಧಾರಕ ಬಸವೇಶ್ವರರ ಪ್ರತಿಮೆಗಳನ್ನು ಅಮಿತ್ ಶಾ ಅವರು ವಿಧಾನಸೌಧದ ಮುಂಭಾಗದಲ್ಲಿ ಅನಾವರಣಗೊಳಿಸಲಿದ್ದಾರೆ.

ಮಾರ್ಚ್ 25 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ.

ಭೇಟಿಯ ವೇಳೆ ಮೋದಿ ಅವರು ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ ಮತ್ತು ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿಯು ವಿವಿಧ ಸಮುದಾಯಗಳನ್ನು ಅವರ ಪ್ರಸಿದ್ಧ ವ್ಯಕ್ತಿಗಳ ಪ್ರತಿಮೆಗಳ ಮೂಲಕ ಸಮಾಧಾನಪಡಿಸಲು ಪ್ರಯತ್ನಿಸುತ್ತಿದೆ.

SCROLL FOR NEXT