ರಾಜ್ಯ

ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೊನೆಯ ಸಚಿವ ಸಂಪುಟ ಸಭೆ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ಸಾಧ್ಯತೆ

Ramyashree GN

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವೇಳೆ ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳು ಮತ್ತು ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ.

ಮತ ಬ್ಯಾಂಕ್‌ನಲ್ಲಿ ಬಿರುಕು ಉಂಟಾಗದಂತೆ ಲಿಂಗಾಯತ ಸಮುದಾಯದ ಉಪಪಂಗಡ ಪಂಚಮಸಾಲಿ ವರ್ಗಕ್ಕೆ ಮೀಸಲಾತಿ ಘೋಷಿಸುವ ಬಗ್ಗೆಯೂ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಸಂಜೆ 4 ಗಂಟೆಗೆ ಸಭೆ ನಡೆಯಲಿದೆ ಮತ್ತು ಎಲ್ಲಾ ಸಚಿವರು ಹಾಜರಿರಲು ತಿಳಿಸಲಾಗಿದೆ. ಮಾದರಿ ನೀತಿ ಸಂಹಿತೆ ಯಾವುದೇ ಸಮಯದಲ್ಲಿ ಘೋಷಣೆಯಾಗುವ ನಿರೀಕ್ಷೆಯಿದ್ದು, ಬೊಮ್ಮಾಯಿ ಅವರು ಪ್ರಮುಖ ವಿಚಾರಗಳ ನಿರ್ಧಾರ ತೆಗೆದುಕೊಳ್ಳಲು ಇದು ಕೊನೆಯ ಅವಕಾಶವಾಗಿದೆ.

ಲಿಂಗಾಯತ ಪಂಚಮಸಾಲಿಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದೆ.

ಸರ್ಕಾರ ಮೀಸಲಾತಿ ನೀಡುವ ವಿಶ್ವಾಸವಿದೆ ಎಂದು ಪಂಚಮಸಾಲಿ ಶ್ರೀಗಳಾದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.

ಆಂದೋಲನದ ನೇತೃತ್ವ ವಹಿಸಿದ್ದ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಮೀಸಲಾತಿ ಕುರಿತು ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಆದೇಶವನ್ನು ರಾಜ್ಯ ಗೆಜೆಟಿಯರ್‌ನಲ್ಲಿ ಪ್ರಕಟಿಸುವಂತೆಯೂ ಅವರು ಸರ್ಕಾರವನ್ನು ಕೋರಿದ್ದರು.

SCROLL FOR NEXT