ರಾಜ್ಯ

ಇಂದು ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕ ಲೋಕಾರ್ಪಣೆ: ರೇಸ್​ ಕೋರ್ಸ್​ ರಸ್ತೆಗೆ ಮಂಡ್ಯದ ಗಂಡಿನ ಹೆಸರು

Manjula VN

ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಟ, ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಲೋಕಾರ್ಪಣೆ ಮಾಡಲಿದ್ದಾರೆ. ಇದರೊಂದಿಗೆ ಹಲವು ವರ್ಷಗಳ ಅಂಬರೀಶ್ ಅಭಿಮಾನಿಗಳ ಕನಸು ಇಂದು ನನಸಾಗುತ್ತಿದೆ.

ಕೇವಲ ಸ್ಮಾರಕ ಮಾತ್ರವಲ್ಲ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ಇಡಲಾಗುತ್ತಿದೆ. ಅದರಂತೆ ಇಂದು ಸಂಜೆ 5 ಗಂಟೆಗೆ ಶಿವಾಜಿನಗರ ಕ್ಷೇತ್ರಕ್ಕೆ ಒಳಪಡುವ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ. ಈ ಸಮಾರಂಭವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ತಲೆಯೆತ್ತಿದ್ದು, ಸ್ಮಾರಕವನ್ನು ಇಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಲಿದ್ದಾರೆ.

ವಿಶೇಷ ವಿನ್ಯಾಸದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದ್ದು, ಅಸಂ‍ಖ್ಯಾತ ಅಭಿಮಾನಿಗಳ ಸಮ್ಮುಖದಲ್ಲಿ ನಡೆಯಲಿರುವ ಲೋಕಾರ್ಪಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ತೋಟಗಾರಿಕಾ ಸಚಿವ ಮುನಿರತ್ನ, ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಡಾ.ರಾಜ್ ಕುಮಾರ್ ಸ್ಮಾರಕದ ಕೂಗಳತೆಯಲ್ಲಿಯೇ ಅಂಬರೀಶ್ ಸ್ಮಾರಕವಿದೆ. ಒಂದು ಕಡೆ ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಸಮಾಧಿ ಇದ್ದು, ಪಕ್ಕದಲ್ಲೇ ಅಂಬರೀಶ್ ಸ್ಮಾರಕ ತಲೆಯೆತ್ತಿದೆ.

SCROLL FOR NEXT