ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: ಕೊನೆಯ ಹಂತದ ಪ್ರಚಾರ, ಪ್ರಿಯಾಂಕಾ ಗಾಂಧಿ ಬೆಂಗಳೂರಿನಲ್ಲಿ ರೋಡ್‌ಶೋ

Ramyashree GN

ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನದಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ಬೆಂಗಳೂರಿನ ವಿಜಯನಗರದಲ್ಲಿ ರೋಡ್ ಶೋ ನಡೆಸಿದರು.

ಕ್ಷೇತ್ರದಿಂದ ಪುನರಾಯ್ಕೆ ಬಯಸುತ್ತಿರುವ ವಿಜಯನಗರ ಶಾಸಕ ಎಂ ಕೃಷ್ಣಪ್ಪ ಮತ್ತು ಪಕ್ಕದ ಗೋವಿಂದರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾ ಕೃಷ್ಣ ಅವರ ಜೊತೆಗಿದ್ದರು. ಬೃಹತ್ ರೋಡ್‌ಶೋನಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸಿದ್ದರು ಮತ್ತು ಈ ವೇಳೆ ಹೆಚ್ಚಿನ ಸಂಖ್ಯೆಯ ಜನರು ರಸ್ತೆಯ ಇಕ್ಕೆಲಗಳಲ್ಲಿ ಜಮಾಯಿಸಿದ್ದರು.

ಹೂವಿನ ಅಲಂಕಾರಗೊಂಡ ವಾಹನದ ಮೇಲೆ ನಿಂತಿದ್ದ ಪ್ರಿಯಾಂಕಾ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರತ್ತ ಕೈ ಬೀಸಿದರು. 

ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಪ್ರಚಾರವು ಸೋಮವಾರ ಅಂತ್ಯಗೊಳ್ಳಲಿದ್ದು, ರಾಜ್ಯದ ಎಲ್ಲಾ ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ - ಮತದಾರರನ್ನು ಓಲೈಸಲು ಕೊನೆಯ ಹಂತದ ಕಸರತ್ತಿನಲ್ಲಿ ತೊಡಗಿವೆ.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ವಿವಿಧ ರೋಡ್ ಶೋಗಳು, ರ‍್ಯಾಲಿಗಳು ಮತ್ತು ಚುನಾವಣಾ ಪ್ರಚಾರಗಳನ್ನು ನಡೆಸಿದರು.

ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹವಣಿಸುತ್ತಿದ್ದು, ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಶ್ರಮಿಸುತ್ತಿದೆ.

ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು, ಎದುರಾಳಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದ ಹಲವು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾದ ಬಜರಂಗ ದಳ ನಿಷೇಧಿಸುವ ವಿಚಾರ ರಾಜಕೀಯ ಪ್ರಚಾರಕ್ಕೆ ಕೇಂದ್ರ ಸ್ಥಾನವನ್ನು ಪಡೆದುಕೊಂಡಿತು.

SCROLL FOR NEXT