ರಾಜ್ಯ

ಡಿಕೆಶಿಯನ್ನೇ ಮುಖ್ಯಮಂತ್ರಿ ಮಾಡುವಂತೆ ಒಕ್ಕಲಿಗ ಶ್ರೀಗಳ ಆಗ್ರಹ

Lingaraj Badiger

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನೇ ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭಾನುವಾರ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ರಾಜ್ಯವನ್ನು ಮುನ್ನಡೆಸಲು ಅತ್ಯಂತ ಅರ್ಹ ವ್ಯಕ್ತಿ ಎಂದು ಶ್ರೀಗಳು ಹೇಳಿದ್ದಾರೆ.

ಕರ್ನಾಟಕದ ಪ್ರಬಲ ಸಮುದಾಯಗಳಲ್ಲಿ ಒಂದಾದ ಒಕ್ಕಲಿಗ ಸಂಘವು ಒಕ್ಕಲಿಗ ಮಠಾಧೀಶರ ನೇತೃತ್ವದಲ್ಲಿ ಇಂದು ಸಂಜೆ ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಸಭೆ ನಡೆಸಿ, ರಾಜ್ಯ ಕಾಂಗ್ರೆಸ್ ಘಟಕದ ಸಾರಥ್ಯ ವಹಿಸಿರುವ ಒಕ್ಕಲಿಗ ನಾಯಕ ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯಿಸಲಾಯಿತು.

ಶಿವಕುಮಾರ್ ಅವರಿಗೆ ಆಡಳಿತ ನಡೆಸಲು ಮತ್ತು ಸಮಾಜ ಸೇವೆ ಮಾಡಲು ಅವಕಾಶ ನೀಡುವಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರಲ್ಲಿ ಎಲ್ಲ ಹಿರಿಯರಲ್ಲಿ ಮನವಿ ಮಾಡಲು ಈ ಸಭೆ ಆಯೋಜಿಸಲಾಗಿದೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಶಿವಕುಮಾರ್ ಅವರು ಪಕ್ಷ ಸಂಕಷ್ಟದಲ್ಲಿದ್ದಾಗ ಹಗಲು ರಾತ್ರಿ ಎನ್ನದೇ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತಂದಿದ್ದಾರೆ. ನಾವೆಲ್ಲರೂ ನಿನ್ನೆ ಅವರ ಕಣ್ಣಲ್ಲಿ ನೀರು ನೋಡಿದ್ದೇವೆ. ಅದು ಸಂತೋಷ ಮತ್ತು ನೋವಿನ ಮಿಶ್ರಣವಾಗಿತ್ತು. ತುಂಬಾ ಶ್ರಮಿಸಿದ ಮನುಷ್ಯನಿಗೆ ಫಲಿತಾಂಶ ಸಿಗಬೇಕು" ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಸಿದ್ದರಾಮಯ್ಯ ಅವರು ಈ ಹಿಂದೆ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರು. ಅವರೂ ಉತ್ತಮ ಆಡಳಿತ ಕೊಟ್ಟಿದ್ದಾರೆ. ಈಗ ಶಿವಕುಮಾರ್ ಅವರಿಗೆ ಒಂದು ಅವಕಾಶ ಸಿಗಲಿ ಎಂದು ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.

SCROLL FOR NEXT