ರಾಜ್ಯ

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ.ಪ್ರಭಾಕರ್ ನೇಮಕ

Lingaraj Badiger

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಮಾಧ್ಯಮ ಸಮನ್ವಯಕರಾಗಿದ್ದ ಕೆ ವಿ ಪ್ರಭಾಕರ್ ಅವರನ್ನು ಈ ಬಾರಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.

ಕೆ.ವಿ. ಪ್ರಭಾಕರ್ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನವನ್ನೂ ಸಹ ನೀಡಲಾಗಿದ್ದು, ಸಚಿವರಿಗೆ ಸಿಗುವ ಎಲ್ಲ ಸೌಲಭ್ಯಗಳು ಅವರಿಗೆ ಸಿಗಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಟಿವಿ ಸುನಂದಮ್ಮ ಅವರು ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯ ಸಂದರ್ಭದಲ್ಲಿ ವಿಶೇಷಾಧಿಕಾರಿಯಾಗಿದ್ದ ಕೆಎಎಸ್‌ ಅಧಿಕಾರಿ ಎಂ ವೆಂಕಟೇಶಯ್ಯ ಅವರನ್ನು ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಲಾಗಿದೆ.

ಇನ್ನು ರಾಜ್ಯ ಸರ್ಕಾರದ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ ರಜನೀಶ್ ಗೋಯಲ್ ಅವರನ್ನು ಮುಖ್ಯಮಂತ್ರಿಯವರ ಆಪರ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮವರ್ತಿ ಪ್ರಭಾರದಲ್ಲಿರಿಸಿ ನೇಮಕ ಮಾಡಲಾಗಿದೆ.

ಪೌರಾಡಳಿತ ಇಲಾಖೆಯ ಜಂಟಿ ನಿರ್ದೇಶಕ ಬಿ. ಶಿವಸ್ವಾಮಿ ಅವರನ್ನು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. 

SCROLL FOR NEXT