ರಾಜ್ಯ

ಪಿಎಸ್ ಐ ನೇಮಕಾತಿ ಹಗರಣ: ನೂತನ ಕಾಂಗ್ರೆಸ್ ಸರ್ಕಾರದಿಂದ ಪ್ರಕರಣದ ಮರು ತನಿಖೆ

Sumana Upadhyaya

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ರಾಜ್ಯದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ನೇಮಕಾತಿ ಹಗರಣದ ಮರು ತನಿಖೆ ನಡೆಸಲಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಶ್ರೇಣಿಯ ಅಧಿಕಾರಿ ಸೇರಿದಂತೆ 30ಕ್ಕೂ ಹೆಚ್ಚು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ನಿನ್ನೆ ಪೊಲೀಸ್ ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಗರಣದ ಬಗ್ಗೆ ವಿಶೇಷ ಪ್ರಸ್ತಾಪಿಸಿ ಇಲಾಖೆ ವಿರುದ್ಧ ವಾಗ್ದಾಳಿ ನಡೆಸಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನು ಕಾಂಗ್ರೆಸ್ ಸರ್ಕಾರ ತನಿಖೆಗೆ ಒಳಪಡಿಸುತ್ತದೆ ಎಂದು ಸಂಪುಟ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಹಗರಣದಲ್ಲಿ ಬಿಜೆಪಿಯ ಹಲವು ಪ್ರಮುಖ ನಾಯಕರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಕಾಂಗ್ರೆಸ್ ನಾಯಕರು ತೀವ್ರವಾಗಿ ಒತ್ತಾಯಿಸಿದ್ದರು. ಮಾಜಿ ಸಚಿವ ಡಾ. ಸಿ.ಎನ್.ಅಶ್ವತ್ ನಾರಾಯಣ ಅವರ ಭ್ರಷ್ಟಾಚಾರದ ಬಗ್ಗೆ ಆರೋಪಿಸಿದ್ದರು. ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಅವರ ಪಾತ್ರವನ್ನು ಉಲ್ಲೇಖಿಸಿದ್ದರು. 

ಬಹಳ ಹಿಂದೆಯೇ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪಾಲ್ ಇನ್ನೂ ಜೈಲಿನಲ್ಲಿದ್ದಾರೆ. ತನಿಖೆ ಈ ಹಂತದಲ್ಲಿರುವಾಗ ಬಿಜೆಪಿಯ ಪ್ರಬಲ ರಾಜಕಾರಣಿಗಳ ಕೈವಾಡವಿದ್ದು ತನಿಖೆ ಮುಂದುವರಿಸಲಾಗುವುದು ಎಂದಿದ್ದಾರೆ. 

ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಈಗಾಗಲೇ ಎರಡು ಚಾರ್ಜ್ ಶೀಟ್‌ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಇನ್ನೂ ಪ್ರಕರಣದ ತನಿಖೆ ನಡೆಸುತ್ತಿದೆ. ಕಾಂಗ್ರೆಸ್ ನಾಯಕತ್ವವು ತನಿಖೆಯನ್ನು ಚುರುಕುಗೊಳಿಸಿ ಬಿಜೆಪಿ ನಾಯಕರ ಅಕ್ರಮಗಳನ್ನು ಹೊರಗೆ ತರಲು ಮುಂದಾಗಿದೆ. 

54,041 ಅಭ್ಯರ್ಥಿಗಳು ಪಿಎಸ್ ಐ ಪರೀಕ್ಷೆಗೆ ಹಾಜರಾಗಿದ್ದರು. 545 ಅಭ್ಯರ್ಥಿಗಳ ಪೈಕಿ 300ಕ್ಕೂ ಹೆಚ್ಚು ಅಭ್ಯರ್ಥಿಗಳು ಪಿಎಸ್‌ಐ ಆಗಲು ಅಧಿಕಾರಿಗಳು ಮತ್ತು ಸಚಿವರಿಗೆ 70 ರಿಂದ 80 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು.

ಆಗ ಆಡಳಿತಾರೂಢ ಬಿಜೆಪಿ ಸಿಐಡಿ ಮುಂದೆ ಸಾಕ್ಷ್ಯಾಧಾರಗಳನ್ನು ನೀಡುವಂತೆ ಕಾಂಗ್ರೆಸ್ ಗೆ ಸವಾಲು ಹಾಕಿತ್ತು.

SCROLL FOR NEXT