ಮಕ್ಕಳಿಗೆ ಸಿಎಂ ಪತ್ರ 
ರಾಜ್ಯ

'ಕಠಿಣ ಶ್ರಮ -ಕಲಿಕೆಯ ಮೇಲೆ ಆಸಕ್ತಿಯಿದ್ದರೆ ಸಾಮಾನ್ಯ ಬಾಲಕ ರಾಜ್ಯದ ಸಿಎಂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ'

ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ.

ರಜಾದಿನಗಳನ್ನು ತಂದೆ-ತಾಯಿ, ಗೆಳೆಯ-ಗೆಳತಿಯರ ಜೊತೆ ಆನಂದದಿಂದ ಕಳೆದ ನಿಮ್ಮನ್ನು ಶಾಲೆಗಳು ಕೈಬೀಸಿ ಕರೆಯುತ್ತಿವೆ. ಕಳೆದ ಎರಡು –ಮೂರು ವರ್ಷಗಳಲ್ಲಿ ಕೊರೊನಾ ವೈರಾಣುವಿನಿಂದಾಗಿ ನೀವೆಲ್ಲ ವಿದ್ಯಾರ್ಥಿ ಜೀವನವನ್ನು ಸಂಪೂರ್ಣ ಅನುಭವಿಸಲಾಗದೆ ಅನೇಕ ಬಗೆಯ ಸಂಕಟ-ಸಂಕಷ್ಟಕ್ಕೆ ಈಡಾಗಿದ್ದೀರಿ. ಈಗ ನಾವು ಆ ಸವಾಲನ್ನು ಗೆದ್ದಿದ್ದೇವೆ, ಆರೋಗ್ಯದ ಪಾಠವನ್ನು ಕಲಿತಿದ್ದೇವೆ. ರಾಜ್ಯದ ಈ ಬಾರಿಯ ಶೈಕ್ಷಣಿಕ ವರ್ಷ ಇಂತಹ ಬದಲಾವಣೆಯ ತಂಗಾಳಿಯೊಂದಿಗೆ ಪ್ರಾರಂಭವಾಗಿದೆ. ಜ್ಞಾನ ದೇಗುಲಕ್ಕೆ ನಿಮಗೆಲ್ಲರಿಗೂ ಸ್ವಾಗತ. ಕೈಮುಗಿದು ಒಳಗೆ ಬನ್ನಿ.

ಶಾಲೆಯೆಂದರೆ ಬರೀ ಕಲ್ಲು ಕಟ್ಟಡವಲ್ಲ. ಅದೊಂದು ಜ್ಞಾನ ದೇಗುಲ. ಹೆತ್ತ ತಂದೆ-ತಾಯಿಗಳಂತೆ ಕಲಿಸುವ ಗುರುಗುಳು ಕೂಡಾ ವಿದ್ಯಾರ್ಥಿಗಳ ಪಾಲಿನ ದೇವರು. ಈ ಶ್ರದ್ದೆ ಮತ್ತು ಗೌರವ ಸದಾ ನಿಮ್ಮಲ್ಲಿರಲಿ. ‘ಪ್ರತಿಯೊಬ್ಬರು ಹುಟ್ಟಿದಾಗ ವಿಶ್ವಮಾನವ, ಬೆಳೆಯುತ್ತಾ ಅಲ್ಪ ಮಾನವನಾಗುತ್ತಾನೆ’ ಎಂದು ರಾಷ್ಟ್ರಕವಿ ಕುವೆಂಪು ಎಚ್ಚರಿಸಿದ್ದರು. ಪರೀಕ್ಷೆ-ಫಲಿತಾಂಶ ಎಲ್ಲವೂ ಮುಖ್ಯವಾದರೂ ಶಿಕ್ಷಣ ಎಂದರೆ ಅಷ್ಟೇ ಅಲ್ಲ. ಶಿಕ್ಷಣ ಎನ್ನವುದು ನಮ್ಮಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಅರಿವು ಮೂಡಿಸಬೇಕು, ಸತ್ಯ ಹೇಳುವ ಧೈರ್ಯವನ್ನು,ನ್ಯಾಯದ ಮಾರ್ಗದಲ್ಲಿ ಮುನ್ನಡೆಯುವ ಶಕ್ತಿಯನ್ನು ನೀಡಬೇಕು. ಅಂತಹ ಶಿಕ್ಷಣ ನಿಮ್ಮ ಪಾಲಿಗೆ ಒದಗಿಬಂದು ನೀವೆಲ್ಲರೂ ಮಹಾಮಾನವರಾಗಿ ಎಂದು ಹಾರೈಸುತ್ತೇನೆ.

ನಾನು ಹಳ್ಳಿಯ ಸಾಮಾನ್ಯ ರೈತ ಕುಟುಂಬದಿಂದ ಬಂದ ವ್ಯಕ್ತಿ. ಈಗ ನಿಮಗೆ ಇರುವ ಕಲಿಕೆಯ ಅವಕಾಶ ನನ್ನಂತಹವನಿಗೆ ಇರಲಿಲ್ಲ. ಒಂದನೇ ತರಗತಿಯಿಂದಲೇ ಶಾಲೆಗೆ ಹೋಗಲಾಗದೆ ಮರಳ ಮೇಲೆ ಕೈಬೆರಳಗಳನ್ನೊತ್ತಿ ಅಕ್ಷರಾಭ್ಯಾಸ ಮಾಡಿ ನಾಲ್ಕನೇ ತರಗತಿಗೆ ನೇರವಾಗಿ ಸೇರಿದವನು ನಾನು. ಅಲ್ಲಿಂದ ಕಾನೂನು ವ್ಯಾಸಂಗ ಮುಗಿಸುವವರೆಗೆ ನನ್ನ ವಿದ್ಯಾರ್ಥಿ ಜೀವನ ಹೂವಿನ ಹಾದಿಯಾಗಿರಲಿಲ್ಲ. ಅಮಾಯಕರಾಗಿದ್ದ ಹೆತ್ತವರ ವಿರೋಧ, ಶೋಷಕರ ಅಡ್ಡಗಾಲು, ಹಣಕಾಸಿನ ಸಮಸ್ಯೆಗಳ ಜೊತೆ ಹೋರಾಡುತ್ತಲೇ ಬಂದವನು. ಕಠಿಣ ಶ್ರಮ ಮತ್ತು ಕಲಿಕೆಯ ಮೇಲೆ ಆಸಕ್ತಿ-ಶ್ರದ್ದೆಗಳಿದ್ದರೆ ಸಾಮಾನ್ಯ ಕುಟುಂಬದಿಂದ ಬಂದ ಒಬ್ಬ ಬಾಲಕ ಕೂಡಾ ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿಯೂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ. ಇದೇ ರೀತಿ ನಿಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳಿಗೇರಬೇಕೆಂದು ನನ್ನ ಆಸೆ.

ಇದೇ ಉದ್ದೇಶದಿಂದ ಕಳೆದ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನದ ಬಿಸಿ ಊಟ, ಕ್ಷೀರಭಾಗ್ಯ, ವಿದ್ಯಾಸಿರಿ,ವಿದ್ಯಾರ್ಥಿ ವೇತನ ಶೂ ಮತ್ತು ಸಾಕ್ಸ್ ಮೊದಲಾದ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಇವುಗಳಿಗೆ ಎದುರಾಗಿರುವ ಸಣ್ಣಪುಟ್ಟ ಅಡ್ಡಿ-ಆತಂಕಗಳನ್ನು ನಿವಾರಿಸಿ ಪುನರ್ ಚಾಲನೆ ನೀಡುವೆ.

ನೀವು ಪಡೆಯುವ ಶಿಕ್ಷಣ ನಿಮ್ಮನ್ನು ತಂದೆ-ತಾಯಿ ಹೆಮ್ಮೆ ಪಡುವಂತಹ ಮಕ್ಕಳನ್ನಾಗಿ ಮತ್ತು ಸಮಾಜ ಪ್ರೀತಿಸುವ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲಿ. ಮುಂದಿನ ಜನಾಂಗವಾಗಿರುವ ನಿಮ್ಮಿಂದ ರಾಜ್ಯದ ಸರ್ವಜನಾಂಗದ ಶಾಂತಿಯ ತೋಟ ಸದಾ ನಳನಳಿಸುತ್ತಾ ಇರಲಿ. ಪಠ್ಯಪುಸ್ತಕಗಳಿಗಷ್ಟೇ ನಿಮ್ಮ ಓದನ್ನು ಸೀಮಿತಗೊಳಿಸಬೇಡಿ.

ನಿಮಗೆಲ್ಲರಿಗೂ ಹೊಸ ಶೈಕ್ಷಣಿಕ ವರ್ಷಕ್ಕೆ ಮತ್ತೊಮ್ಮೆ ಸ್ವಾಗತ ಮತ್ತು ಶುಭಾಶಯಗಳು.

ನಿಮ್ಮೆಲ್ಲರ ಪ್ರೀತಿಯ ಮುಖ್ಯಮಂತ್ರಿ

ಸಿದ್ದರಾಮಯ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಅಡ್ಡ ಬರುವ Iran ಸಣ್ಣ ಬೋಟ್ ಗಳ ಗುಂಡಿಟ್ಟು ಉಡಾಯಿಸಿ': ಅಮೆರಿಕ ಸೇನೆಗೆ Donald Trump ಆದೇಶ!

ಸ್ವಾತಂತ್ರ್ಯದ ನಂತರ ತಮಿಳುನಾಡು, ಪ.ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ, ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!

Hassan: 'ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ': ಎಚ್ ಡಿಕೆ ಮುಂದೆಯೇ HD Revanna ಕಣ್ಣೀರಿನ ಶಪಥ

IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!

IPL 2026: MI ವಿರುದ್ಧ ಸ್ಫೋಟಕ ಬ್ಯಾಟಿಂಗ್, ಶತಕದ ಮೂಲಕ ಐತಿಹಾಸ ನಿರ್ಮಿಸಿದ Sanju Samson, ಎಲೈಟ್ ಗ್ರೂಪ್ ಸೇರ್ಪಡೆ

SCROLL FOR NEXT