ಸಿಎಂ ಸಿದ್ದರಾಮಯ್ಯ 
ರಾಜ್ಯ

ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: ಸಿದ್ದರಾಮಯ್ಯ ವಾಗ್ದಾಳಿ

ಬರಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಆರೋಪಿಸಿದರು.

ಮೈಸೂರು: ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಆರೋಪಿಸಿದರು.

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ‘ನಮ್ಮ ಸಚಿವರ ಭೇಟಿಗೂ ಕೇಂದ್ರ ಸಚಿವರು ಸಮಯ ಕೊಡುತ್ತಿಲ್ಲ. ನಮ್ಮವರು 3 ದಿನ ದೆಹಲಿಗೆ ಹೋಗಿ ಕಾದಿದ್ದಾರೆ. ಪ್ರಧಾನಿಯೂ ಸಮಯ ಕೊಡುತ್ತಿಲ್ಲ. ಕೇವಲ ಸಚಿವರ ಕಾರ್ಯದರ್ಶಿಗಳನ್ನು ಭೇಟಿಯಾಗಿ ಬರುವ ಸ್ಥಿತಿ ಬಂದಿದೆ. ಇದು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಗೆ ಸಾಕ್ಷಿಯಾಗಿದೆ’ ಎಂದು ಆರೋಪಿಸಿದರು.

'ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದನ್ನು ಸಹಿಸಿಕೊಳ್ಳಲು ಪ್ರಧಾನಿ ಮೋದಿ ಅವರಿಗೆ ಆಗುತ್ತಿಲ್ಲ. ಹೀಗಾಗಿ, ಬರ ಪರಿಹಾರದ ವಿಷಯದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ' ಎಂದು ಕಿಡಿಕಾರಿದರು.

'ಬರಗಾಲದ ಹಿನ್ನೆಲೆಯಲ್ಲಿ ಪ್ರತಿ ತಾಲ್ಲೂಕುಗಳಿಗೂ ಭೇಟಿ ನೀಡಿ ಅಧ್ಯಯನ ಮಾಡಿ, ಜನರು ಮತ್ತು ಶಾಸಕರನ್ನು ಭೇಟಿಯಾಗಿ ನ.15ರೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದೇನೆ. ಪರಿಹಾರ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಮೊದಲಿಗೆ ರೂ.900 ಕೋಟಿ ಹಾಗೂ ಮೊನ್ನೆಯೂ ರೂ.324 ಕೋಟಿ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರದಿಂದ ಪರಿಹಾರ ಬಂದಿಲ್ಲವೆಂಬ ಕಾರಣಕ್ಕೆ ನಾವು ಯಾವ ಕೆಲಸವನ್ನೂ ನಿಲ್ಲಿಸಿಲ್ಲ. ಕುಡಿಯುವ ನೀರು ಪೂರೈಸುತ್ತಿದ್ದೇವೆ. ಉದ್ಯೋಗ ಕೊಡುತ್ತಿದ್ದೇವೆ' ಎಂದು ಹೇಳಿದರು.

ನಾನು ಕೇಂದ್ರಕ್ಕೆ ಪತ್ರ ಬರೆದ ಮೇಲೆ ಎನ್‌ಆರ್‌ಇಜಿಎಸ್‌ ಬಾಕಿಯಲ್ಲಿ ರೂ.600 ಕೋಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದಾರೆ. ಬರದಿಂದ ಒಟ್ಟು ರೂ.33 ಸಾವಿರ ಕೋಟಿ ನಷ್ಟವಾಗಿದೆ. ಮಾರ್ಗಸೂಚಿ ಪ್ರಕಾರ ಪರಿಹಾರವಾಗಿ ನಾವು ರೂ.17,900 ಕೋಟಿ ಕೇಳಿದ್ದೇವೆ. ಆದರೆ, ಒಂದು ರೂಪಾಯಿಯನ್ನೂ ಕೊಟ್ಟಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಪರಿಹಾರಕ್ಕೆ ಒತ್ತಾಯಿಸಿ ಪ್ರಧಾನಿ ಹಾಗೂ ಗೃಹ ಸಚಿವರಿಗೆ ಮತ್ತೆ ಪತ್ರ ಬರೆದಿದ್ದೇನೆ’, ‘ರಾಜ್ಯ ಬಿಜೆಪಿ ನಾಯಕರು ಇಲ್ಲಿ ಪ್ರವಾಸ ಕೈಗೊಂಡು ಏನ್ಮಾಡುತ್ತಾರೆ? ಅವರಿಗೆ ನಿಜವಾಗಿ ನಮ್ಮ ರೈತರ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರವನ್ನು ಕೇಳಲಿ, ಹಣ ಬಿಡುಗಡೆ ಮಾಡಿಸಲಿ’ ಎಂದು ಸವಾಲು ಹಾಕಿದರು.

‘ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರು ರಾಜಕೀಯವಾಗಿ ಟೀಕಿಸುತ್ತಾರಷ್ಟೆ. ಪಂಚ ರಾಜ್ಯ ಚುನಾವಣೆಯಲ್ಲಿ ಅವರು ಗ್ಯಾರಂಟಿ ಕೊಟ್ಟರೆ ಅದು ಬಡವರ ಕಾರ್ಯಕ್ರಮ, ನಾವು ಕೊಟ್ಟರೆ ದಿವಾಳಿಯಾಗುತ್ತದೆ ಎನ್ನುತ್ತಾರೆ. ಅವರೇನೇ ಹೇಳಿದರೂ ನಾವು ಬಡವರು, ಸಾಮಾನ್ಯ ವರ್ಗದವರು ಹಾಗೂ ಹಳ್ಳಿ ಜನರ ಪರವಾಗಿದ್ದೇವೆ’ ಎಂದರು.

'ನಾವು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಆಗುವುದಿಲ್ಲ ಎಂದುಕೊಂಡಿದ್ದರು. ನಾವು ಎಲ್ಲವನ್ನೂ ಜಾರಿ ಮಾಡಿದ್ದರಿಂದ ಸಹಿಸಿಕೊಳ್ಳಲು ಅವರಿಗೆ ಆಗುತ್ತಿಲ್ಲ. ಹೀಗಾಗಿಯೇ ಆರೋಪ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.       

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT