ಹಾಸನ: ಪ್ರಸಕ್ತ ಸಾಲಿನ ಶಕ್ತಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. ಉತ್ಸವವು ಬುಧವಾರ ವಿದ್ಯುಕ್ತವಾಗಿ ತೆರೆ ಕಂಡಿದೆ.
ಇಂದು ಮಧ್ಯಾಹ್ನ 12.23ಕ್ಕೆ ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ ಮಾಡಲಾಗಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಬಂದ್ ಮಾಡಲಾಗಿದೆ.
ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಸಲ್ಲಿಸಿ, ಗರ್ಭಗುಡಿಯಿಂದ ಅರ್ಚಕರು, ಅಧಿಕಾರಿಗಳು ಹೊರಬಂದು ಗರ್ಭಗುಡಿ ಬಾಗಿಲಿಗೆ ಪೂಜೆ ಸಲ್ಲಿಸಿ ಬೀಗ ಹಾಕಿದ್ದಾರೆ. ಮುಂದಿನ ವರ್ಷವೇ ಹಾಸನಾಂಬೆ ದೇಗುಲ ಓಪನ್ ಆಗಲಿದೆ.
ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ನಿಂತಿದ್ದ ಭಕ್ತರಿಗೆ ಕರೆಂಟ್ ಶಾಕ್: ಆಘಾತದಿಂದ ನೂಕುನುಗ್ಗಲು, 17 ಮಂದಿ ಆಸ್ಪತ್ರೆಗೆ ದಾಖಲು
ಪ್ರಸಕ್ತ ವರ್ಷ ನವೆಂಬರ್ 2ರಂದು ಹಾಸನಬಾಂಬೆ ದೇವಸ್ಥಾನ ತೆರೆಯಲಾಗಿತ್ತು. ಆದರೆ, ನವೆಂಬರ್ 3ರಿಂದ ನ.15ರ ಬೆಳಗ್ಗೆ 7 ಗಂಟೆ ವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಸಮಯದಲ್ಲಿ ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ.
ಇದೀಗ ಮುಂದಿನ ವರ್ಷ ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿದ್ದು, 2024ರ ಅಕ್ಟೋಬರ್ 24ರಿಂದ ನವೆಂಬರ್ 3ರ ವರೆಗೆ ಹಾಸನಾಂಬೆ ದರ್ಶನ ಇರಲಿದೆ. ಇದರೊಂದಿಗೆ ಒಟ್ಟು 9 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತದೆ.
ಪ್ರಸಕ್ತ ಸಾಲಿನಲ್ಲಿ ಒಟ್ಟು 12 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಮುಂದಿನ ವರ್ಷ 9 ದಿನ ಮಾತ್ರ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿದುಬಂದಿದೆ.