ರಾಜ್ಯ

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿ

Ramyashree GN

ಉಡುಪಿ: ಇಲ್ಲಿನ ಸ್ಥಳೀಯ ನ್ಯಾಯಾಲಯವು ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ಬುಧವಾರ 14 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಉಡುಪಿ ಮತ್ತು ಬೆಳಗಾವಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನೇಜಾರ ಕುಟುಂಬದ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಯನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡುಚಿಯಲ್ಲಿ ಮಂಗಳವಾರ ಬಂಧಿಸಿದ್ದಾರೆ.

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್ ಮಂಗಳವಾರ ಮಾಹಿತಿ ನೀಡಿದ್ದಾರೆ.

'ಇದು ಪೂರ್ವ ಯೋಜಿತ ಕೊಲೆ. ತನ್ನ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಸಂತ್ರಸ್ತರಲ್ಲಿ ಒಬ್ಬಾಕೆಯನ್ನು ಕೊಲ್ಲುವುದು ಆರೋಪಿಯ ಉದ್ದೇಶವಾಗಿತ್ತು. ಆದರೆ, ಆಕೆಯನ್ನು ಕೊಲ್ಲುವಾಗ ಇತರರು ಮಧ್ಯಪ್ರವೇಶಿಸಲು ಪ್ರಯತ್ನಿಸಿದ್ದರಿಂದ ಅವರನ್ನೂ ಕೊಂದಿದ್ದಾಗಿ ಹೇಳಿದ್ದಾನೆ. ಅವರ ಹೇಳಿಕೆಗಳ ಸತ್ಯಾಸತ್ಯತೆಯ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ' ಎಂದು ಎಸ್ಪಿ ತಿಳಿಸಿದ್ದಾರೆ.

ಪ್ರಕರಣವನ್ನು ಹಲವು ದೃಷ್ಟಿಕೋನಗಳಿಂದ ತನಿಖೆ ನಡೆಸಲಾಗುತ್ತಿದ್ದು, ಶಂಕಿತರೆಲ್ಲರನ್ನು ವಿಚಾರಣೆಗೊಳಪಡಿಸಿದ ಬಳಿಕವಷ್ಟೇ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.

'ತಾಂತ್ರಿಕ ಸಾಕ್ಷ್ಯ ಮತ್ತು ಗುಪ್ತಚರ ವರದಿಗಳ ಆಧಾರದ ಮೇಲೆ ಶಂಕಿತ ಆರೋಪಿ ಪ್ರವೀಣ್ ಚೌಗಲೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾವು ಹಲವಾರು ಶಂಕಿತರನ್ನು ವಿಚಾರಣೆ ನಡೆಸುತ್ತಿದ್ದೇವೆ' ಎಂದು ಅವರು ಹೇಳಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಸ್ಪಿ, ಡಿವೈಎಸ್ಪಿ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ

SCROLL FOR NEXT