ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್ಕೌಂಟರ್ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಬುಧವಾರ ರಜೌರಿ ಸೆಕ್ಟರ್ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 63ನೇ ರಾಷ್ಟ್ರೀಯ ರೈಫಲ್ಸ್ನ 29 ವರ್ಷದ ಯೋಧ ಪ್ರಾಂಜಲ್ ಅವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನು ಓದಿ: ಜಮ್ಮು ಕಾಶ್ಮೀರ ಎನ್ಕೌಂಟರ್: ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಛಾಯಾಗ್ರಾಹಕ, ಪ್ರಯಾಣಿಕ, ಹವ್ಯಾಸಿ ಜಾದೂಗಾರ!
"ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಇಂದು ರಾತ್ರಿ 8 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ನಂತರ ಅವರ ಪಾರ್ಥಿವ ಶರೀರವನ್ನು ಬನ್ನೇರುಘಟ್ಟದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುವುದು" ಎಂದು ರಕ್ಷಣಾ ಮೂಲಗಳು ತಿಳಿಸಿವೆ.
"ಶನಿವಾರ ಬೆಳಗ್ಗೆ ಪುಷ್ಪ ನಮನ ಮತ್ತು ಸೇನಾ ಗೌರವದ ನಂತರ ಅಂತಿಮ ವಿಧಿ ವಿಧಾನಗಳು ನಡೆಯಲಿವೆ" ಎಂದು ಅವರು ಹೇಳಿದ್ದಾರೆ.
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಎಂ ವೆಂಕಟೇಶ್ ಅವರ ಪುತ್ರ ಪ್ರಾಂಜಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರೈಸಿದರು.