ರಾಜ್ಯ

ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Manjula VN

ತುಮಕೂರು: ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಮೀಟರ್ ಬಡ್ಡಿ ವ್ಯವಹಾರ ಕಿರುಕುಳದಿಂದಾಗಿ ತುಮಕೂರಿನಲ್ಲಿ ನಿನ್ನೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಕರೀಬ್ ಸಾಬ್ ಎಂಬುವವರು ಡೆತ್ ನೋಟ್ ಬರೆದಿಟ್ಟಿದ್ದರು.

ಇದರಂತೆ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಇಂದು ಗೃಹ ಸಚಿವ ಪರಮೇಶ್ವರ್ ಅವರು ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೀಬ್ ಸಾಬ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಐದು ಜನರನ್ನು ವಶಕ್ಕೆ ಪಡೆಯಲಾಗಿದೆ. ಆತ್ಮಹತ್ಯೆಯ ಹಿಂದೆ ಬಡ್ಡಿ ವ್ಯವಹಾರ ಇದೆ ಎಂದು ಜನರು ಮಾತನಾಡುತ್ತಿದ್ದಾರೆ. ಅದನ್ನು ಗಂಭೀರವಾಗಿ ತೆಗದುಕೊಂಡು, ಬಡ್ಡಿ ವ್ಯವಹಾರವನ್ನು ನಿಲ್ಲಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಬಡ್ಡಿ ವ್ಯವಹಾರ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ಏನು ಎಂಬುವುದು ತಿಳಿಯಲಿದೆ ಎಂದು ಹೇಳಿದರು.

ನಗರ ಮತ್ತು ಜಿಲ್ಲೆಯಲ್ಲಿ ಅಮಾಯಕರಿಗೆ ಸಾಲ ಕೊಟ್ಟು ಬಡ್ಡಿ ಪಡೆಯುವುದು ಜಾಸ್ತಿಯಾಗಿದೆ. ಮೀಟರ್ ಬಡ್ಡಿ ಮಾಡುವರ, ದಂಧೆ ನಡೆಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಇಂತಹ ಘಟನೆ ಮರುಕಳಿಸಬಾರದು. ಇದನ್ನು ತಡೆಯುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

SCROLL FOR NEXT