ಬೆಂಗಳೂರು: ಹಣ ದುರ್ಬಳಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಎಂಎಸ್ ಶಿಕ್ಷಣ ಟ್ರಸ್ಟ್ಗೆ (ಬಿಎಂಎಸ್ಇಟಿ) ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ.
ಟ್ರಸ್ಟ್ನಲ್ಲಿ ನಡೆದಿದೆ ಎನ್ನಲಾದ ಹಣ ದುರ್ಬಳಕೆ ಆರೋಪದ ವಿಚಾರಣೆಗಾಗಿ ತನಿಖಾ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ನೇತೃತ್ವದಲ್ಲಿ ಈಚೆಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದಕ್ಕೆ ಪೂರಕವಾಗಿ ಟ್ರಸ್ಟ್ನ ಹಣಕಾಸು ಚಟುವಟಿಕೆಗಳ ಮೇಲೆ ತಕ್ಷಣದಿಂದಲೇ ನಿಗಾ ವಹಿಸಲು ಹಿರಿಯ ಐಎಎಸ್ ಅಧಿಕಾರಿ ನೇಮಿಸಲಾಗಿದೆ ಎಂದು ಎಂದು ತಿಳಿದು ಬಂದಿದೆ.
ಸಿಎಂ ಸಭೆ ನಡೆಸಿದ ಕೆಲವು ದಿನಗಳ ನಂತರ, BMSET ಟ್ರಸ್ಟಿ ಮತ್ತು BMS ಕಾಲೇಜ್ ಆಫ್ ಇಂಜಿನಿಯರಿಂಗ್ ಅಧ್ಯಕ್ಷ ಪಿ ದಯಾನಂದ ಪೈ ಅವರು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ಬಿಎಂಎಸ್ ಟ್ರಸ್ಟ್ ನಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದರು. ಬಿಎಂಸೆಟ್ನ ಲೈಫ್ ಟ್ರಸ್ಟಿಯಾಗಿ ದಯಾನಂದ ಪೈ ಅವರನ್ನು ನೇಮಕ ಮಾಡಲು ಅನುಮತಿ ನೀಡಲು ಆಗಿನ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ್ ನಿರಾಕರಿಸಿದ್ದರು ಎಂದು ದೂರಿದ್ದರು.