ರಾಜ್ಯ

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಕ್ರಮ- ಸಿಎಂ ಸಿದ್ದರಾಮಯ್ಯ ಭರವಸೆ

Nagaraja AB

ಬೆಂಗಳೂರು: ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ 2023 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ  ಹಾಗೂ ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಮಹಾತ್ಮಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಅನುಕೂಲ ಆಗುತ್ತದೆ ಎಂದರು. 

ಖಾದಿ-ಗ್ರಾಮೋದ್ಯೋಗ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು. ಮತ್ತು ಗ್ರಾಮೋದ್ಯೋಗ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಮುಖ್ಯಮಂತ್ರಿ, ಅಧಿಕಾರ ವಿಕೇಂದ್ರಕರಣ ಗಾಂಧಿಯವರ ಕನಸಾಗಿತ್ತು. ಇದರಿಂದ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಂಬಿದ್ದರು. ಹೀಗಾಗಿ ಗ್ರಾಮ ಸ್ವರಾಜ್ಯವನ್ನು ಪ್ರತಿಪಾದಿಸಿದರು.  ಗ್ರಾಮಗಳ ಅಭಿವೃದ್ದಿ ಇಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎನ್ನುವುದು ಗಾಂಧೀಜಿಯವರ ನೀತಿಯಾಗಿತ್ತು ಎಂದು ವಿವರಿಸಿದರು. 

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಮಹಾತ್ಮ ಗಾಂಧಿಯವರ ಆಶಯದಂತೆ ಅಧಿಕಾರ ವಿಕೇಂದ್ರೀಕರಣಕ್ಕೆ ಮುನ್ನುಡಿ ಬರೆದರು. ಜನತಂತ್ರದ ವಿಕೇಂದ್ರೀಕರಣಕ್ಕಾಗಿ ಸಂವಿಧಾನಕ್ಕೆ  ತಿದ್ದುಪಡಿ ತಂದವರು ರಾಜೀವ್ ಗಾಂಧಿ ಮತ್ತು ಇದನ್ನು ಜಾರಿ ಮಾಡಿದವರು ಮಾಜಿ ಪ್ರಧಾನಿ ನರಸಿಂಹರಾವ್ ಎಂದು ಹೇಳಿದ ಸಿದ್ದರಾಮಯ್ಯ, ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಗಳಲ್ಲಿ ಶೇ. 50 ಮೀಸಲಾತಿ ಜಾರಿಗೆ ಆಗಲು ಕಾರಣ ಆದವರು ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ ಎಂದರು. 

ಈಗ ಕೇಂದ್ರ ಸರ್ಕಾರ ಜಾರಿ ಮಾಡಿದ್ದೀವಿ ಎಂದು ಹೇಳಿಕೊಳ್ಳುತ್ತಿರುವ ಮಹಿಳೆಯರ ರಾಜಕೀಯ ಮೀಸಲಾತಿಗೆ ಮುನ್ನುಡಿಬರೆದದ್ದು ಕಾಂಗ್ರೆಸ್. ಈಗ ಹಿಂದುಳಿದ ವರ್ಗಗಳ ಮಹಿಳೆಯರಿಗೂ ಮೀಸಲಾತಿ ಕಲ್ಪಿಸಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. 

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

SCROLL FOR NEXT