ರಾಜ್ಯ

ಕಾವೇರಿ ಜಲ ವಿವಾದ: ಕನ್ನಡ ಹೋರಾಟಗಾರರಿಂದ ದೆಹಲಿ ಚಲೋ, ಅಕ್ಟೋಬರ್ 18ರಂದು ದೆಹಲಿಯಲ್ಲಿ ಪ್ರತಿಭಟನೆ

Ramyashree GN

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು 'ದೆಹಲಿ ಚಲೋ' ಕಾರ್ಯಕ್ರಮಕ್ಕೆ ಕರೆ ನೀಡಿವೆ. ಅಕ್ಟೋಬರ್ 18ರಂದು ಜಂತರ್ ಮಂತರ್‌ನಲ್ಲಿ ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸಲಿದ್ದಾರೆ.

ಮಂಗಳವಾರ ಕನ್ನಡಪರ ಹೋರಾಟಗಾರರು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಅವರೊಂದಿಗೆ ಬೆಂಗಳೂರಿನಿಂದ ರೈಲು ಮತ್ತು ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. 

ದೆಹಲಿಯ ಜಂತರ್ ಮಂತರ್‌ನಲ್ಲಿ ಕನ್ನಡಪರ ಹೋರಾಟಗಾರರೊಂದಿಗೆ ದೆಹಲಿ ಕನ್ನಡ ಸಂಘ ಕೂಡ ಸೇರಲಿದೆ. ಕಾವೇರಿ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಕೋರಲು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗಾಗಿ ಸಮಯ ಕೇಳಿದ್ದಾರೆ.

ನಾರಾಯಣ ಗೌಡ ಮತ್ತು ದೆಹಲಿ ಕನ್ನಡ ಸಂಘದ ಅಧ್ಯಕ್ಷ ನಾಗರಾಜ್ ಅವರ ಮನವಿಗೆ ಪಿಎಂಒ ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಅಕ್ಟೋಬರ್ 18ರಂದು ಸಂಜೆ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅವರು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಸಹ ಭೇಟಿಯಾಗಲಿದ್ದಾರೆ.

ಜಲಾಶಯಗಳಲ್ಲಿ ಕಡಿಮೆ ನೀರಿನ ಸಂಗ್ರಹವಿದ್ದು, ಬೇಸಿಗೆಯಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆಯ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂಬ ರಾಜ್ಯದ ಮನವಿಯ ಹೊರತಾಗಿಯೂ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿದೆ.

SCROLL FOR NEXT