ರಾಜ್ಯ

ರಾಜ್ಯದಲ್ಲಿನ ವಿದ್ಯುತ್ ಸಮಸ್ಯೆಗೆ ಹಿಂದಿನ ಬಿಜೆಪಿಯ ದುರಾಡಳಿತವೇ ಕಾರಣ: ಸಿಎಂ ಸಿದ್ದರಾಮಯ್ಯ

Nagaraja AB

ಬೆಂಗಳೂರು: ಪ್ರಸ್ತುತ ರಾಜ್ಯ ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಹಿಂದಿನ ಬಿಜೆಪಿಯ ದುರಾಡಳಿತವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಮುಖ್ಯಮಂತ್ರಿ, ಅನೈತಿಕ ಮಾರ್ಗಗಳ ಮೂಲಕ  2019ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ತನ್ನ 4 ವರ್ಷದಲ್ಲಿ ಆಡಳಿತದಲ್ಲಿ ಒಂದು ಒಂದು ಯೂನಿಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಲ್ಲ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿಯೂ ಸಹ ಯಾವುದೇ ಹೊಸ ರೀತಿಯ ವಿದ್ಯುತ್ ಖರೀದಿ ಒಪ್ಪಂದಗಳು ಸಹ ಆಗಲಿಲ್ಲ ಎಂದಿದ್ದಾರೆ. 

ಛತ್ತೀಸ್ ಗಢದ ಸಹಯೋಗದಲ್ಲಿ 1,200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ ಎಂದಿದ್ದರೂ ಅದು ಕಾರ್ಯಗತವಾಗಲಿಲ್ಲ. ಪ್ರಧಾನ ಮಂತ್ರಿ ಕುಸುಮ್ ಯೋಜನೆಯಡಿ 3.3 ಲಕ್ಷಕ್ಕೂ ಹೆಚ್ಚು ಕೃಷಿ ಪಂಪ್ ಸೆಟ್ ಗಳಿಗೆ ವಿಕೇಂದ್ರೀಕೃತ ಸೋಲಾರ್ ಪ್ಲಾಂಟ್ ಗಳ ಅಳವಡಿಕೆ ನಮ್ಮ ರಾಜ್ಯದಲ್ಲಿ ಇದುವರೆಗೂ ಅನುಷ್ಠಾನಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ. 

2013 ರಿಂದ 2018ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 11,200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿ, ಒಟ್ಟು ಉತ್ಪಾದನೆಯನ್ನು ದುಪ್ಪಟ್ಟುಗೊಳಿಸಿದ್ದೆವು. ಹಿಂದಿನ ಬಿಜೆಪಿ ಸರ್ಕಾರ ಸೌರ ವಿದ್ಯುತ್, ಪವನ ವಿದ್ಯುತ್, ಥರ್ಮಲ್ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವತ್ತ ಗಮನ ಹರಿಸಿ, ಸೂಕ್ತ ಕ್ರಮ ಕೈಗೊಂಡಿದ್ದರೆ ಇಂದಿನ ಪರಿಸ್ಥಿತಿಯೇ ಬೇರೆಯದಾಗಿರುತ್ತಿತ್ತು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

SCROLL FOR NEXT